ಸಾರಾಂಶ
ರನ್ಯಾಳಿಗೆ ರಾಜ್ಯ ಸರ್ಕಾರದ ಅಧಿಕಾರಿಗಳೇ ಎಸ್ಕಾರ್ಟ್ ಕೊಟ್ಟಿದ್ದಾರೆ. ಶಿಷ್ಟಾಚಾರದ ನೆಪದಲ್ಲಿ ಚೆಕ್ಕಿಂಗ್ಮಾ ಡದೇ ಬಿಟ್ಟಿದ್ದಾರೆ. ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಉಡುಪಿ : ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿರುವುದರಿಂದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಶನಿವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ರನ್ಯಾಳಿಗೆ ರಾಜ್ಯ ಸರ್ಕಾರದ ಅಧಿಕಾರಿಗಳೇ ಎಸ್ಕಾರ್ಟ್ ಕೊಟ್ಟಿದ್ದಾರೆ. ಶಿಷ್ಟಾಚಾರದ ನೆಪದಲ್ಲಿ ಚೆಕ್ಕಿಂಗ್ ಕೂಡ ಮಾಡದೇ ಬಿಟ್ಟಿದ್ದಾರೆ. ಈಗ ಈ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಒಮ್ಮೆ ಗೃಹ ಸಚಿವ ಪರಮೇಶ್ವರ್ ಅವರು ಪ್ರಕರಣವನ್ನು ಸಿಐಡಿಗೆ ಕೊಟ್ಟರು. ಈಗ ಆಕೆಯ ತಂದೆ ರಾಮಚಂದ್ರ ರಾವ್ ಡಿಐಜಿ ಆಗಿರುವುದರಿಂದ ಪ್ರಕರಣವನ್ನು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕೊಟ್ಟಿದ್ದೇವೆ ಎನ್ನುತ್ತಿದ್ದಾರೆ.
ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಹೇಳುವರೆಗೆ ಈ ಪ್ರಕರಣದ ಬಗ್ಗೆ ರಾಜ್ಯದ ಗುಪ್ತಚರ ಇಲಾಖೆಗೆ ಗೊತ್ತೇ ಇರಲಿಲ್ಲ. ಹೀಗೆ ಸರ್ಕಾರದ ನಡವಳಿಕೆ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿವೆ. ಆದ್ದರಿಂದ ಪ್ರಕರಣದ ಸಂಪೂರ್ಣ ತನಿಕೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದವರು ಹೇಳಿದರು.ಬಿಜೆಪಿ ಭಿನ್ನಮತ ಶಮನ:ರಾಜ್ಯ ಬಿಜೆಪಿಯಲ್ಲಿದ್ದ ಭಿನ್ನಮತವನ್ನು ಸರಿ ಮಾಡಲಾಗಿದೆ ಎಂದು ಸಚಿವ ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯ ಬಿಜೆಪಿಯಲ್ಲಾದ ಪ್ರತಿಯೊಂದು ವಿಚಾರವನ್ನು ಹೈಕಮಾಂಡ್ ಗಮನಿಸಿದೆ ಮತ್ತು ಅದನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಿದೆ, ಒಂದು ವಾರದಿಂದ ಬದಲಾವಣೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜೋಶಿ ಅವರನ್ನು ಶ್ರೀಕೃಷ್ಣ ಮಠಕ್ಕೆ ಸಾಂಪ್ರದಾಯಿಕವಾಗಿ ಬರ ಮಾಡಿಕೊಳ್ಳಲಾಯಿತು. ನಂತರ ಪತ್ನಿ ಜ್ಯೋತಿ ಜೋಶಿ ಅವರೊಂದಿಗೆ ಶ್ರೀ ಕೃಷ್ಣ ದೇವರ ದರ್ಶನ ಪಡೆದ ಸಚಿವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೌರವಿಸಿದರು. ಬಳಿಕ ಸಚಿವರು ಮಠದಲ್ಲೇ ಅನ್ನಪ್ರಸಾದ ಸ್ವೀಕಾರ ಮಾಡಿದರು.