ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

| Published : Aug 09 2024, 12:31 AM IST

ಸಾರಾಂಶ

Rashtriya Lok Adalat on 14 September

-ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಮಾಹಿತಿ

------

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಮುಂಬರುವ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು.

ಜಿಲ್ಲಾ ನ್ಯಾಯಾಲಯದ ಪ್ರಾಂಗಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ. ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು ಎಂದರು.

ಕಳೆದ ಜುಲೈ 13ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4973 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. 1,16,278 ವ್ಯಾಜ್ಯ ಪೂರ್ವ ಪ್ರಕರಣಗಳ ಜೊತೆಗೆ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ. ಈ ಮೂಲಕ ಕೌಟುಂಬಿಕ ವಿಘಟನೆ ತಪ್ಪಿ, ಮಕ್ಕಳಿಗೆ ತಂದೆ ತಾಯಿ ಪ್ರೀತಿ ದೊರೆಯುವಂತಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.

ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯಾದ 75 ವರ್ಷಗಳ ಅಂಗವಾಗಿ ಜುಲೈ 29ರಿಂದ ಆಗಸ್ಟ್ 3ವರೆಗೆ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿತ್ತು. ಇದರಲ್ಲಿ ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಕೈಗೆತ್ತಿಕೊಳ್ಳಲಾಗಿತ್ತು. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ 22 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಗುರುತಿಸಲಾಗಿತ್ತು. ಇದರಲ್ಲಿ 3 ಪ್ರಕರಣಗಳು ಇತ್ಯರ್ಥಗೊಂಡು ಸುಖಾಂತ್ಯ ಕಂಡಿವೆ. ಇದೊಂದು ದಾಖಲೆಯ ಮೈಲುಗಲ್ಲಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.

ಮುಂಬರುವ ಸೆಪ್ಟೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಹೆಚ್ಚಿನ‌ ಮಾಹಿತಿ ಬೇಕಾದಲ್ಲಿ ಇ-ಮೇಲ್ dlsachitradurga2@gmail.com ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 9141193935 ಹಾಗೂ ದೂರವಾಣಿ ಸಂಖ್ಯೆ 08194- 222322 ಕ್ಕೆ ಸಹ ಸಂಪರ್ಕಿಸಬಹುದು ಎಂದು ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ವಿಜಯ್ ಉಪಸ್ಥಿತರಿದ್ದರು.

----------------

ಪೋಟೋ:8 ಸಿಟಿಡಿ 2

ರಾಷ್ಟ್ರೀಯ ಲೋಕ ಅದಾಲತ್ ಕುರಿತಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಮಾಹಿತಿ ನೀಡಿದರು.

-----