ಸಿಎಂ ಡಿ.ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಅಭಿವೃದ್ಧಿಗೆ ಬದ್ಧವಾಗಿದೆ.

ಯಲಬುರ್ಗಾ: ಸಚಿವ ಬಸವರಾಜ ರಾಯರಡ್ಡಿ ಜತೆಗೂಡಿ ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ನೂತನ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದ ಶಾಸಕರ ಗೃಹ ಕಚೇರಿಗೆ ಸಚಿವರಾದ ಬಳಿಕ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಗುರುವಾರ ಅವಳಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಿಎಂ ಡಿ.ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಅಭಿವೃದ್ಧಿಗೆ ಬದ್ಧವಾಗಿದೆ. ಈ ಬಾರಿ ಕೊಪ್ಪಳ ಜಿಲ್ಲೆಗೆ ಎರಡು ಸಚಿವ ಸ್ಥಾನ ಲಭಿಸಿರುವುದು ಸಂತಸ ತಂದಿದೆ. ನಾನು ಮತ್ತು ಬಸವರಾಜ ರಾಯರಡ್ಡಿ ಅವರು ಜಿಲ್ಲೆಯ ಎಲ್ಲ ಶಾಸಕರ ವಿಶ್ವಾಸ ಪಡೆದು ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇವೆ. ಸಚಿವ ರಾಯರಡ್ಡಿ ಮಾರ್ಗದರ್ಶನದಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ವಿಶೇಷ ಒತ್ತು ನೀಡಲಾಗುವುದು. ಇಡೀ ರಾಜ್ಯದ ಅಭಿವೃದ್ಧಿಯಲ್ಲಿಯೂ ಉತ್ತಮ ಕೆಲಸ ಮಾಡುವ ಸಂಕಲ್ಪ ಹೊಂದಿದ್ದೇವೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಚಂಡೂರು ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಲಭಿಸಿರುವುದು ಸಂತಸದ ವಿಚಾರ. ಸಚಿವರಾದ ಬಸವರಾಜ ರಾಯರಡ್ಡಿ, ಶಿವರಾಜ ತಂಗಡಗಿ ಜನರಿಗೆ ಉತ್ತಮ ಆಡಳಿತ ನೀಡುವ ಮೂಲಕ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ ಕೊರ್ಲಹಳ್ಳಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಹೇಮರಡ್ಡಿ ರಡ್ಡೇರ್, ಮಹಾಂತೇಶ ಗಾಣಗೇರ್, ಈಶ್ವರ ಅಟಮಾಳಗಿ, ಹುಲಗಪ್ಪ ಬಂಡಿವಡ್ಡರ್, ಶರಣಪ್ಪ ಉಪ್ಪಾರ, ಬಸವರಾಜ ಈಳಗೇರ, ಕಳಕೇಶ ಸೂಡಿ, ಅಶೋಕ ಮಾಲಿಪಾಟೀಲ್, ಶರಣಗೌಡ ಬಸಾಪುರ, ಶಿವಣ್ಣ ರಾಜೂರು, ನಿಂಗಪ್ಪ ಕಮತರ, ಸಿದ್ದು ಪಾಟೀಲ, ಪುನೀತ್ ಕೊಪ್ಪಳ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.