ಕನ್ನಡಪ್ರಭ ವಾರ್ತೆ ವಿಜಯಪುರ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಪ್ರಥಮ ಮಾನ್ಯತೆ ನೀಡುವಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೂ ಈವರೆಗೆ ಕಠಿಣ ಕ್ರಮ ಕೈಗೊಳ್ಳದಿರುವ ಕಾಂಗ್ರೆಸ್ ಸರ್ಕಾರದ ಜೀವಂತಿಕೆ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಪ್ರಥಮ ಮಾನ್ಯತೆ ನೀಡುವಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೂ ಈವರೆಗೆ ಕಠಿಣ ಕ್ರಮ ಕೈಗೊಳ್ಳದಿರುವ ಕಾಂಗ್ರೆಸ್ ಸರ್ಕಾರದ ಜೀವಂತಿಕೆ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಅಕ್ರಮ ಚರ್ಚೆ ಆಗುತ್ತಿದ್ದರೂ ಈವರೆಗೆ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕೇವಲ 14 ಸಿಬ್ಬಂದಿಯನ್ನು ಅನ್ಯ ಕಡೆ ನಿಯೋಜನೆಗೊಳಿಸಿದ್ಧಾರೆ. ಈ ಪ್ರಕ್ರಿಯೆಯಲ್ಲಿ ತಮ್ಮ ಲಾಗಿನ್ ದುರ್ಬಳಕೆಯಾಗಿದೆ ಎಂದು ಡಿಡಿಪಿಐ ಫೆ.25ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಅದರಲ್ಲಿ ತಮಗೇ ಗೊತ್ತಿಲ್ಲದಂತೆ ತಮ್ಮ ಲಾಗಿನ್ ಬಳಸಿ ಶಾಲೆಗಳಿಗೆ ನವೀಕರಣ ಹಾಗೂ ಪ್ರಥಮ ಮಾನ್ಯತೆ ನೀಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಒಟ್ಟು 58 ಶಾಲೆಗಳ ನವೀಕರಣ ಹಾಗೂ ಪ್ರಥಮ ಮಾನ್ಯತೆಯಲ್ಲಿ ಅಕ್ರಮ ನಡೆದಿರುವುದಾಗಿ ತಿಳಿಸಿದ್ದಾರೆ. ಈ 58 ಶಾಲೆಗಳ ಪೈಕಿ ಬಹುತೇಕ ಶಾಲೆಗಳಿಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿದ್ದಾರೆ. ಹಾಗಾದರೆ ಇದರಲ್ಲಿ ಶಾಸಕರ ಕೈವಾಡ ಇಲ್ಲದಿರಲು ಹೇಗೆ ಸಾಧ್ಯ? ಅವರನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲವೇಕೆ? ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಉನ್ನತ ಮಟ್ಟದ ತನಿಖಾ ತಂಡ ರಚಿಸಬೇಕು. ಈಗಿರುವ ಅಧಿಕಾರಿ ಹಾಗೂ ಸಿಬ್ಬಂದಿ ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಟ್ಟು ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವ ಮೂಲಕ ತಮ್ಮ ಪ್ರಾಮಾಣಿಕತೆ, ಆಡಳಿತದಲ್ಲಿನ ಪಾರದರ್ಶಕತೆ ಹಾಗೂ ಜೀವಂತಿಕೆಯನ್ನು ಸಾಬೀತುಪಡಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ರಾಜ್ಯಪಾಲರಿಗೂ ಪತ್ರ ಬರೆಯುತ್ತಿರುವುದಾಗಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.-----------

11bij07: ಸಂಸದ ರಮೇಶ ಜಿಗಜಿಣಗಿ