​ಸಿರುಗುಪ್ಪ: ತಾಲೂಕಿನಲ್ಲಿ ಮುಂಗಾರು ಮಳೆಯ ಅಭಾವ ಹಾಗೂ ಸಂಭಾವ್ಯ ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಪ್ರಮುಖ ಇಲಾಖೆಗಳ ಜಂಟಿ ಅಧಿಕಾರಿಗಳ ತುರ್ತು ಸಭೆ ಜರುಗಿತು.​ತಹಶೀಲ್ದಾರ್ ಗೌಸಿಯಾಬೇಗಂ ಮಾತನಾಡಿ, ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಲಾಯಿತು. ಬರಗಾಲದ ಪರಿಸ್ಥಿತಿ ಎದುರಾದರೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಚಿತವಾಗಿಯೇ ಮೇವು ಬ್ಯಾಂಕ್ ಸ್ಥಾಪಿಸಲು ಮತ್ತು ಮೇವಿನ ದಾಸ್ತಾನು ಕಾಯ್ದಿರಿಸಲು ಪಶುಸಂಗೋಪನೆ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಬರ ಪರಿಸ್ಥಿತಿಯನ್ನು ಎದುರಿಸಲು ಕೃಷಿ, ತೋಟಗಾರಿಕೆ, ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ತಾಲೂಕಿನಲ್ಲಿ ಮಳೆ ಅಭಾವದಿಂದ ಉಂಟಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಆಡಳಿತ ಸನ್ನದ್ಧವಾಗಿದೆ. ಸಾರ್ವಜನಿಕರು ಮತ್ತು ರೈತರು ಆತಂಕ ಪಡಬೇಕಾಗಿಲ್ಲ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.

ಕೃಷಿ ಇಲಾಖೆಯ ಎ.ಡಿ. ಮಂಜುನಾಥ ರೆಡ್ಡಿ ಮಾತನಾಡಿ, ಮುಂಗಾರು ಮಳೆ ವಿಳಂಬ ಅಥವಾ ಕೊರತೆಯಾದಾಗ ರೈತರು ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚು ನೀರು ಬೇಡುವ ಸಾಂಪ್ರದಾಯಿಕ ಬೆಳೆಗಳ ಬದಲಾಗಿ ಕಡಿಮೆ ಅವಧಿಯಲ್ಲಿ ಮತ್ತು ಕಡಿಮೆ ನೀರಿನಲ್ಲಿ ಬರುವ ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಬರಗಾಲದ ಸಮಯದಲ್ಲಿ ಒಂದೇ ಬೆಳೆಯನ್ನು ನಂಬಿಕೊಳ್ಳುವ ಏಕಬೆಳೆ ಪದ್ಧತಿ ಕೈಬಿಡುವುದು ಸೂಕ್ತ. ಬೆಳೆಗಳ ಸಾಲುಗಳ ನಡುವೆ ಕೃಷಿ ತ್ಯಾಜ್ಯ ಅಥವಾ ಒಣಗಿದ ಹುಲ್ಲು, ಹಸಿಗೊಬ್ಬರ/ ಮಲ್ಚಿಂಗ್ ಹರಡುವುದರಿಂದ ಭೂಮಿಯ ತೇವಾಂಶ ಆವಿಯಾಗುವುದು ತಪ್ಪುತ್ತದೆ ಎಂದು ರೈತರಿಗೆ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.