ಖಾಲಿ ಕೊಡ ಹಿಡಿದು ನಗರದಲ್ಲಿ ಮೆರವಣಿಗೆ । ತಮಿಳುನಾಡು ಸರ್ಕಾರ, ಸಿಡಬ್ಲ್ಯುಆರ್‌ಸಿ ವಿರುದ್ಧ ಧಿಕ್ಕಾರ ಕೂಗು । ಧರಣಿ ಕುಳಿತು ಆಕ್ರೋಶ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ‘ಖಾಲಿ ಕೊಡ’ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೈಯಲ್ಲಿ ಖಾಲಿ ಕೊಡ ಹಿಡಿದು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರು ಮಲ್ಲು ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ ೧೫ ದಿನಗಳ ಕಾಲ ಪ್ರತಿನಿತ್ಯ ೩೫೦೦ ಕ್ಯುಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ರಕ್ತ ಕೊಟ್ಟರೂ ನೀರು ಬಿಡುವುದಿಲ್ಲ ಎಂದರು.


ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಸರಿಯಲ್ಲ. ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು. ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಹಬಾರದು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿ.ಎಂ. ಶಂಕರ್‌, ವಡ್ಡಗೆರೆ ಕೃಷ್ಣ, ಕಾಳನಹುಂಡಿ ಮಲ್ಲಿಕ್, ಬಡಗಲಪುರ ಕೆಂಪ, ಪಣ್ಯದಹುಂಡಿ ರಾಜಣ್ಣ, ಹರದನಹಳ್ಳಿ ರಾಮಚಂದ್ರ ನಾಯಕ, ಹೆಗ್ಗೋಠಾರ ರಾಜಶೇಖರ, ರಾಜಣ್ಣ ದೇಶಿಗೌಡನಪುರ, ಮಹೇಶ್, ನಮ್ಮನೆ ಪ್ರಶಾಂತ್, ಡಿ.ಎನ್. ಉಷಾ, ಆಟೋ ಮಂಜು, ಭಾಗ್ಯ, ಮಣಿಕಂಠ ಇತರರು ಭಾಗವಹಿಸಿದ್ದರು.

--

೧ಸಿಎಚ್‌ಎನ್೧

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಖಾಲಿ ಕೊಡ’ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.

----------