ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಆಡಳಿತ ನೀಡಲು ಸರ್ಕಾರ ಬದ್ಧವಾಗಿದ್ದು, ಪ್ರಜೆಗಳೇ ನಮಗೆ ನಿರ್ಣಾಯಕರು. ಅವರ ಸಹಕಾರದಿಂದ ಹಲವು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗಿದೆ.
ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ
ಕನ್ನಡಪ್ರಭ ವಾರ್ತೆ ಅಣ್ಣಿಗೇರಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಆಡಳಿತ ನೀಡಲು ಸರ್ಕಾರ ಬದ್ಧವಾಗಿದ್ದು, ಪ್ರಜೆಗಳೇ ನಮಗೆ ನಿರ್ಣಾಯಕರು. ಅವರ ಸಹಕಾರದಿಂದ ಹಲವು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗಿದೆ. ಮತದಾರರೇ ನಿಜವಾದ ಶಕ್ತಿ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.ತಾಲೂಕಿನ ನಲವಡಿ ಗ್ರಾಮದ ಹಳೇ ಪಂಚಾಯಿತಿ ಆವರಣದಲ್ಲಿ ಶನಿವಾರ ನಡೆದ ಪ್ರಜಾಸೇವೆ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿ, ಸ್ಥಳೀಯ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವೆ ಆಂದೋಲನ ಆರಂಭಿಸಿದೆ ಎಂದರು.
ನಲವಡಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ 30 ಕಿ.ಮೀ. ಚಕ್ಕಡಿ ರಸ್ತೆ ನಿರ್ಮಾಣ ಹಾಗೂ ₹3 ಕೋಟಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮದಲ್ಲಿ ಕನಿಷ್ಠ 100 ಜನರನ್ನು ಒಳಗೊಂಡ ಸಂಘಟನೆ ರಚಿಸಿ, ಅದರಲ್ಲಿ 10 ಜನರ ಸಮಿತಿ ರೂಪಿಸಿ ಕೌಶಲ ಅಭಿವೃದ್ಧಿಗೆ ಉತ್ತೇಜನ ನೀಡುವ ಯೋಜನೆಯಿದ್ದು, ಯುವಕ ಮಂಡಳಿಗೆ ₹10 ಲಕ್ಷ ಪ್ರೋತ್ಸಾಹಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದರು.ರಾಡಿಹಳ್ಳ ಅಭಿವೃದ್ಧಿಗೆ ₹40 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿದೆ. ಈ ಯೋಜನೆಯಿಂದ ಯರಗುಪ್ಪಿ, ಶಿರಗುಪ್ಪಿ, ಇಂಗಳಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.
ನಂತರ ಶಾಸಕರು ಸಾರ್ವಜನಿಕರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.ಮುಖಂಡ ಎಂ.ಎಸ್. ರೋಣದ ಮಾತನಾಡಿದರು. ಉಪವಿಭಾಗಾಧಿಕಾರಿ ಕವಿತಾ ಪ್ರಭಾವತಿ, ತಹಸೀಲ್ದಾರ್ ಮಂಜುನಾಥ ದಾಸಪ್ಪನವರ್, ಸಿಪಿಐ ರವಿ ಕಪ್ಪತ್ತನವರ, ನೀರಾವರಿ ಇಲಾಖೆ ಅಧಿಕಾರಿ ಎ.ಎಂ. ಜಾಲಗಾರ, ಸಿಡಿಪಿಒ ಗಾಯತ್ರಿ ಪಾಟೀಲ, ಕೃಷಿ ಅಧಿಕಾರಿ ರವೀಂದ್ರಗೌಡ ಪಾಟೀಲ ಸೇರಿ ಹಲವರಿದ್ದರು.