ರಿಯಲ್‌ ಎಸ್ಟೇಟ್‌ ಉದ್ಯಮಿಯ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ

| Published : May 08 2024, 01:05 AM IST

ರಿಯಲ್‌ ಎಸ್ಟೇಟ್‌ ಉದ್ಯಮಿಯ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ರೌಡಿ ಶೀಟರ್‌ ಆಗಿದ್ದ ಉದ್ಯಮಿಯನ್ನು ಮನೆ ಬಳಿಯೇ ಕೊಂದು ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಣಸವಾಡಿಯ ಆರ್.ಎಸ್.ಪಾಳ್ಯ ನಿವಾಸಿ ಕಾರ್ತಿಕೇಯನ್(40) ಕೊಲೆಯಾದವರು. ಮಂಗಳವಾರ ರಾತ್ರಿ ಸುಮಾರು 7 ಗಂಟೆಗೆ ಕಾರ್ತಿಕೇಯನ್ ಮನೆ ಸಮೀಪದಲ್ಲಿ ವಾಯುವಿಹಾರ ನಡೆಸುತ್ತಿದ್ದ. ಈ ವೇಳೆ ನಾಲ್ಕೈದು ದ್ವಿಚಕ್ರ ವಾಹನಗಳಲ್ಲಿ ಬಂದ ಐದಾರು ಮಂದಿ ದುಷ್ಕರ್ಮಿಗಳು ಕಾರ್ತಿಕೇಯನ್ ಮೇಲೆ ದಾಳಿಗೆ ಮುಂದಾಗಿದ್ದಾರೆ. ತಪ್ಪಿಸಿಕೊಳ್ಳಲು ಕಾರ್ತಿಕೇಯನ್‌ ಓಡಿದಾಗ ಬೆನ್ನಟ್ಟಿದ ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಯಾದ ಕಾರ್ತಿಕೇಯನ್‌ ವಿರುದ್ಧ ಈ ಹಿಂದೆ ಬಾಣಸವಾಡಿ ಮತ್ತು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು. ಎರಡು ವರ್ಷಗಳ ಹಿಂದೆ ಕೋರ್ಟ್‌ ಮೂಲಕ ರೌಡಿ ಪಟ್ಟಿ ರದ್ದುಪಡಿಸಿಕೊಂಡಿದ್ದ. ಬಳಿಕ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡು ಜೀವನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಕೊಲೆಯಾದ ಕಾರ್ತಿಕೇಯನ್‌ ಇತ್ತೀಚೆಗೆ ಕೆಲ ವಿವಾದಿತ ಸ್ಥಳಗಳಿಗೆ ಬೇಲಿ ಹಾಕಿಕೊಂಡಿದ್ದ. ಈ ವಿಚಾರವಾಗಿ ಮೈಕಲ್‌ ಮಂಜು ಮತ್ತು ಸಹಚರರ ಜತೆಗೆ ಜಗಳವಾಗಿತ್ತು. ಈ ವಿಚಾರವಾಗಿ ಮಂಜುಗೆ ಕಾರ್ತಿಕೇಯನ್‌ ಗನ್‌ ತೋರಿಸಿ ಬೆದರಿಸಿದ್ದ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಬಂಧನದ ಬಳಿಕ ತನಿಖೆಯಿಂದ ನಿಖರ ಕಾರಣ ತಿಳಿದು ಬರಲಿದೆ.

ರಿಯಲ್‌ ಎಸ್ಟೇಟ್ ವ್ಯವಹಾರ ಹಾಗೂ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.