ಸಾರಾಂಶ
ಕಾಲುವೆಗಳಿಗೆ ನೀರು ಪೂರೈಕೆ ಮಾಡಲು ನೀರಾವರಿ ನಿಗಮದ ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೇ ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ
ನರಗುಂದ: ತಾಲೂಕಿನ ನೀರಾವರಿ ನಿಗಮದ ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೇ ಬೀಕೋ ಎನ್ನುತ್ತಿದ್ದು, ಸರ್ಕಾರ ಸಿಬ್ಬಂದಿ ನೇಮಕ ಮಾಡಿ ತಾಲೂಕಿನ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
ಅವರು 3400ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಮಲಪ್ರಭಾ ಜಲಾಶಯ ವ್ಯಾಪ್ತಿಗೆ ಹೊಂದಿಕೊಂಡಿರುವ ಈ ತಾಲೂಕು ಸಂಪೂರ್ಣ ನೀರಾವರಿ ಪ್ರದೇಶವಾಗಿದೆ, ಆದರೆ ತಾಲೂಕಿನ ಎಲ್ಲ ಗ್ರಾಮಗಳ ಕಾಲುವೆಗಳಿಗೆ ನೀರು ಪೂರೈಕೆ ಮಾಡಲು ನೀರಾವರಿ ನಿಗಮದ ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೇ ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈಗಾಗಲೇ ನಾವು ಹಲವಾರು ಬಾರಿ ಸರ್ಕಾರಕ್ಕೆ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸರ್ಕಾರ ಬೇಗ ನೀರಾವರಿ ಇಲಾಖೆಗೆ ಸಿಬ್ಬಂದಿಗಳನ್ನು ನೇಮಕ ಮಾಡದಿದ್ದರೆ ನೀರಾವರಿ ಕಚೇರಿಗೆ ಬೀಗ ಹಾಕಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರಾದ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನಮಂತ ಸರನಾಯ್ಕರ, ಶಂಕ್ರಪ್ಪ ಜಾಧವ, ಶಿವಪ್ಪ ಸಾತಣ್ಣವರ, ಅರ್ಜುನ ಮಾನೆ, ಫಕೀರಪ್ಪ ಅಣ್ಣಿಗೇರಿ, ಮಲ್ಲೇಶಪ್ಪ ಅಬ್ಬಗೇರಿ, ಯಲ್ಲಪ್ಪ ಚಲವಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಮುಂತಾದವರು ಇದ್ದರು.