ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7721ರಂತೆ ನಿಗದಿಪಡಿಸಲಾಗಿದೆ.

ಗದಗ: 2025- 26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2026ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಹಾಗೂ ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಆರ್. ಬಂಡಿ ಮಾತನಾಡಿ, ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7721ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಈ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಲಾಗಿದೆ.

ನೋಂದಣಿ ಕಾರ್ಯದ ಜತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ಕೇಂದ್ರದಿಂದ ಎನ್‌ಸಿಸಿಎಫ್ ಹಾಗೂ ರಾಜ್ಯದಲ್ಲಿ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ(ಕೆಒಎಫ್) ಬೆಂಗಳೂರು ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದರು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. 13 ಸ್ಥಳಗಳಲ್ಲಿ ಖರೀದಿ ಕೇಂದ್ರ

ಗದಗ ತಾಲೂಕು ಒಜಿಸಿಎಸ್‌ ಹೊಂಬಳ, ನರಗುಂದ ಒಜಿಸಿಎಸ್‌, ನರಗುಂದ, ಚಿಕ್ಕನರಗುಂದ, ಕಣಕಿಕೊಪ್ಪ, ಪಿಕೆಪಿಎಸ್‌ ಕೊಣ್ಣೂರ, ಕಲಕೇರಿ, ಶಿರಹಟ್ಟಿ, ರಣತೂರ, ಲಕ್ಷ್ಮೇಶ್ವರ ಒಜಿಸಿಎಸ್‌, ಶಿಗ್ಲಿ, ರೋಣ ಒಜಿಸಿಎಸ್‌, ಅಬ್ಬಿಗೇರಿ, ಗಜೇಂದ್ರಗಡ ಒಜಿಸಿಎಸ್‌, ನಿಡಗುಂದಿ, ಮುಂಡರಗಿ ಒಜಿಸಿಎಸ್‌, ಬರದೂರ, ಪೇಠಾಲೂರ, ಕಲಕೇರಿ.