ಕನ್ನಡಪ್ರಭ ವಾರ್ತೆ ಅರಸೀಕೆರೆ
ಆಧುನಿಕ ಜೀವನಶೈಲಿಯಲ್ಲಿ ಜನರು ಹಣ ಮತ್ತು ಐಶ್ವರ್ಯದ ಹಿಂದೆ ಓಡುತ್ತಿರುವ ಸಂದರ್ಭದಲ್ಲಿ ಆರೋಗ್ಯದ ಮಹತ್ವವನ್ನು ಮರೆಯಬಾರದು. ಉತ್ತಮ ಆರೋಗ್ಯವಿದ್ದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ್ ಕುಮಾರ್ ಹೇಳಿದರು.ತಾಲೂಕಿನ ಗಂಡಸಿ ಹೋಬಳಿಯ ಜಿ.ಗೊಲ್ಲರಹಳ್ಳಿ ಗ್ರಾಮದಲ್ಲಿ ಗಂಡಸಿ ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗ, ಅಸಾಂಕ್ರಾಮಿಕ ರೋಗಗಳ ವಿಭಾಗ ಹಾಗೂ ಹಾಸನದ ಅಗರ್ವಾಲ್ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಆರೋಗ್ಯ ಸಮಸ್ಯೆಗಳು ಗಂಭೀರ ಸ್ವರೂಪ ಪಡೆಯುವ ಮುನ್ನವೇ ಅವುಗಳನ್ನು ಪತ್ತೆಹಚ್ಚುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಆರೋಗ್ಯ ಶಿಬಿರಗಳು ಸಾರ್ವಜನಿಕರಿಗೆ ವರದಾನವಾಗಿವೆ. ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.ಗಂಡಸಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ತೇಜಮೂರ್ತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯಿಂದ ವಿವಿಧ ರೋಗಗಳು ಹೆಚ್ಚಾಗುತ್ತಿವೆ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ. ರಸ್ತೆ ಬದಿ ಮಾರಾಟವಾಗುವ ಹಾಗೂ ರಾಸಾಯನಿಕ ಪದಾರ್ಥಗಳನ್ನು ಬಳಸಿ ತಯಾರಿಸಲಾದ ಆಹಾರ ಸೇವನೆಯಿಂದ ದೂರವಿರಬೇಕು ಎಂದು ಎಚ್ಚರಿಕೆ ನೀಡಿದರು.ಶಿಬಿರದಲ್ಲಿ ಆರೋಗ್ಯ ತಪಾಸಣೆ, ಕಣ್ಣಿನ ಪರೀಕ್ಷೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಗ್ರಾಮಸ್ಥರು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು.ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಯ ಅನುರಾಧ, ನಾಗರಾಜ್, ಚೈತನ್ಯ, ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ, ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ರಾಮಚಂದ್ರ, ಶಿಕ್ಷಕರಾದ ಗಿರೀಶ್, ಮಧುಸೂದನ್ ಹಾಗೂ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.ಆರೋಗ್ಯದ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ
ಆರೋಗ್ಯ ಸಮಸ್ಯೆಗಳು ಗಂಭೀರ ಸ್ವರೂಪ ಪಡೆಯುವ ಮುನ್ನವೇ ಅವುಗಳನ್ನು ಪತ್ತೆಹಚ್ಚುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಆರೋಗ್ಯ ಶಿಬಿರಗಳು ಸಾರ್ವಜನಿಕರಿಗೆ ವರದಾನವಾಗಿವೆ. ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.