ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಗುಜರಾತ್ ಹೈಕೋರ್ಟಿನ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಬೇಕು. ಹೊಸದಾಗಿ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ಮುಂತಾದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜುಲೈ 9 ರಿಂದ ಅಂಗನವಾಡಿ ಕಾರ್ಯಕರ್ತೆಯರು ಸಾಮೂಹಿಕ ರಜೆ ಹಾಕಿ ಸಾರ್ವತ್ರಿಕ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಸಿಡಿಎಸ್ ಯೋಜನೆಯಡಿ ದುಡಿಯುತ್ತಿರುವ ಮಹಿಳೆಯರಿಗೆ ಕನಿಷ್ಠ ಮಾಸಿಕ 26 ಸಾವಿರ ರು. ವೇತನ ನೀಡಬೇಕು. ಮಾಸಿಕ ಪಿಂಚಿಣಿಯನ್ನು 10 ಸಾವಿರ ರು ಗಳಿಗೆ ಹೆಚ್ಚಳ ಮಾಡಬೇಕೆಂಬ ಒತ್ತಾಯ ಸರಕಾರದ ಮುಂದಿದೆ ಎಂದರು.ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಂದು 10 ವರ್ಷ ಕಳೆದರೂ ಇದುವೆರೆಗೂ ಐಸಿಡಿಎಸ್ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತರಿಗೆ ಒಂದು ರು ವೇತನ ಹೆಚ್ಚಿಸಿಲ್ಲ. ಆದರೆ ಕಾರ್ಪೋರೇಟ್ ಕಂಪನಿಗಳ 18.32 ಲಕ್ಷ ಕೋಟಿ ರೂಗಳ ಸಾಲವನ್ನು ರೈಟಪ್ ಹೆಸರಿನಲ್ಲಿ ಮನ್ನಾ ಮಾಡುತ್ತಿದೆ. ಸರಕಾರದ ಈ ನಡೆ ಮಾನವ ಸಂಪನ್ಮೂಲ ಬೆಳವಣಿಗೆಗೆ ವಿರುದ್ದವಾಗಿದೆ. ಇದರ ವಿರುದ್ದ ನಿರಂತರವಾಗಿ ಹೋರಾಟ ನಡೆಸುತಿದ್ದರೂ ಸಹ ಸರಕಾರ ಮಾತ್ರ 29 ಕಾರ್ಮಿಕ ಕಾಯ್ದೆಗಳನ್ನು ವಿಲೀನಗೊಳಿಸಿ, ನಾಲ್ಕು ಸಂಹಿತೆಗಳನ್ನು ರಚಿಸಿ, ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ, ಜಿಲ್ಲಾಧ್ಯಕ್ಷೆ ಕಮಲಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ವಾರಭಾನು, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮತ್ತಿತರರು ಉಪಸ್ಥಿತರಿದ್ದರು.