ಕನ್ನಡಪ್ರಭ ವಾರ್ತೆ ಪಾಂಡವಪುರ

ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ಪ್ರತಿಯೊಬ್ಬರು ಸ್ಮರಿಸಿ ಮುನ್ನಡೆಯಬೇಕು ಎಂದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿಯಿಂದ ವಿಜೃಂಭಣೆಯಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ಹಲವು ಮಹನೀಯರ ಹೋರಾಟ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಮುಂಚೂಣಿ ನಾಯಕರನ್ನು ಜ್ಞಾಪಿಸುವ, ಅವರ ಸಾಧನೆಗಳ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯರು ಮಾಡಬೇಕಾಗಿದೆ ಎಂದರು.

ಮಹಾತ್ಮ ಗಾಂಧಿ ಅವರ ಕನಸಿನಂತೆ ಹಳ್ಳಿಗಳಲ್ಲಿ ಜನರು ಸ್ವಾವಲಂಬಿ ಬದುಕು ನಡೆಸಿ ಆರ್ಥಿಕ ಸ್ವಾವಲಂಭಿಯಾಗುವ ಜೊತೆಗೆ ಸ್ವಯಂ ಪ್ರೇರಿತವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ಬಾಲ್ಯವಿವಾಹ, ಹೆಣ್ಣು ಭ್ರೂಣಹತ್ಯೆಯಂತಹ ಪ್ರಕರಣಗಳ ತಡೆಗೆ ಕ್ರಮ ವಹಿಸಬೇಕು ಎಂದರು.

ಸರ್ಕಾರ ಪಾಂಡವಪುರ ತಾಲೂಕನ್ನು ಸಾವಯವ ತಾಲೂಕು ಎಂಬುದಾಗಿ ಘೋಷಣೆ ಮಾಡಿದೆ. ಪಟ್ಟಣದ ತಾಪಂ ಆವರಣದಲ್ಲಿ ಪ್ರತಿ ಸೋಮವಾರ ಸಾವಯವ ಸಂತೆ ನಡೆಸಲಾಗುತ್ತಿದೆ. ಜೊತೆಗೆ ಮೊದಲ ಹಂತದಲ್ಲಿ 60 ಕ್ಲಸ್ಟರ್ ಮೂಲಕ 1 ಕ್ಲಸ್ಟರ್ ಗೆ 125 ಎಕರೆಯಂತೆ 7700 ಎಕರೆ ಭೂಮಿಯಲ್ಲಿ ಸಾವಯವ ಕೃಷಿ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.


ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಅವರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ, ಬಳಿಕ ವಿದ್ಯಾರ್ಥಿಗಳ ಹಾಗೂ ಬ್ಯಾಂಡ್ ಸೆಟ್ ತಂಡದಿಂದ ಧ್ವಜವಂದನೆ ಸ್ವೀಕರಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ನಾಡು, ನುಡಿ, ದೇಶ ಬಲಿದಾನ ಸಂಬಂಧಿಸಿದ ಹಾಡುಗಳಿಗೆ ನೃತ್ಯ ಪ್ರದರ್ಶನ ನೀಡಿದರು. ಎಲ್ಲಾ ಶಾಲೆಗಳಿಗೂ ನಗದು ಬಹುಮಾನ ನೀಡಿದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ವೀಣಾ, ಬಿಇಒ ಧರ್ಮಶೆಟ್ಟಿ, ಬಿಆರ್ ಸಿ ಪ್ರಕಾಶ್, ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ, ರೈತಸಂಘ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಮಂಜುನಾಥ್, ಕಿಸಾನ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.