ಕುಶಾಲನಗರ: ಕುಶಾಲನಗರ ತಾಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭ ಈ ತಿಂಗಳ 19ರಂದು ನಡೆಯಲಿದ್ದು, ಸುತ್ತೂರು ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ಆಗಮಿಸಲಿದ್ದಾರೆ ಎಂದು ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ತಿಳಿಸಿದ್ದಾರೆ.

ಕುಶಾಲನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಕಾರ್‍ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ತೊರೆನೂರು ವಿರಕ್ತ ಮಠ ಶ್ರೀ ಮರುಳ ಸಿದ್ದೇಶ್ವರ ಸ್ವಾಮೀಜಿಯವರ ತಪೋ ಕ್ಷೇತ್ರವಾಗಿದ್ದು, ಶ್ರೀ ಮಠಕ್ಕೆ ಪುರಾತನ ಐತಿಹ್ಯವಿದೆ. ವಿರಕ್ತ ಮಠದ ಶ್ರೀ ಮರುಳಸಿದ್ದೇಶ್ವರ ಸ್ವಾಮೀಜಿ ಹಾಗೂ ನಿಕಟಪೂರ್ವ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13ನೇ ವರ್ಷದ ಸಂಸ್ಮರಣೋತ್ಸವ 19ರಂದು ಬೆಳಗ್ಗೆ 10.30ಕ್ಕೆ ಜರುಗಲಿದೆ.ಸುತ್ತೂರು ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯುವ ಧಾರ್ಮಿಕ ಕಾರ್‍ಯಕ್ರಮವನ್ನು ಅರಕಲಗೂಡು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಉದ್ಘಾಟಿಸಲಿದ್ದು, ಮಡಿಕೇರಿ ಶಾಸಕ ಡಾ. ಮಂತರ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.ಕೊಡಗು ಜಿಲ್ಲೆಯ ವಿವಿಧ ಮಠಗಳ ಮಠಾಧಿಪತಿಗಳು ಆಗಮಿಸಲಿದ್ದು,ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಸಂಗಪ್ಪ ಆಲೂರ ಅನುಭಾವ ನುಡಿಗಳಾಡುವರು. ಮಡಿಕೇರಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ವಿ. ಶಿವಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಶಿರಂಗಾಲದ ಎಸ್.ವಿ. ನಂಜುಂಡಪ್ಪ, ಆಲೂರು ಸಿದ್ದಾಪುರದ ಜೆ.ಎಸ್. ವಿರೂಪಾಕ್ಷಯ್ಯ, ಹೆಬ್ಬಾಲೆಯ ಮರೂರಿನ ಎಚ್.ವಿ. ಶಿವರುದ್ರಪ್ಪ, ರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ. ಜಗದೀಶ್, ಸಮಾಜದ ಸಂಪನ್ಮೂಲ ಶಿಕ್ಷಕಿ ಡಾ. ಜಿ.ಎಂ. ಹೇಮಲತಾ ಅವರನ್ನು ಕಾರ್‍ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಮಲ್ಲೇಶ ಸ್ವಾಮೀಜಿ ತಿಳಿಸಿದರು. ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ ಮಾತನಾಡಿ, ತೊರೆನೂರು ವಿರಕ್ತ ಮಠದಲ್ಲಿ ಜರುಗಲಿರುವ ಹಿರಿಯ ಶ್ರೀಗಳ ಸಂಸ್ಮರಣೋತ್ಸವದಲ್ಲಿ ಹಾಗೂ ಧಾರ್ಮಿಕ ಕಾರ್‍ಯಕ್ರಮದಲ್ಲಿ ಸುತ್ತಮುತ್ತಲಿನ ಎಲ್ಲ ಗ್ರಾಮಗಳ ಸರ್ವ ಸಮುದಾಯಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಕಾರ್‍ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದರು.

ಮಠ ಹಾಗೂ ಭಕ್ತರ ನಡುವೆ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರತಿ ತಿಂಗಳ ಹುಣ್ಣಿಮೆಯಂದು ಚಿಂತನಾಗೋಷ್ಠಿಗಳನ್ನು ಹಮ್ಮಿಕೊಂಡು ಕೃಷಿ, ಆರೋಗ್ಯ, ವಾಣಿಜ್ಯ ,ಶಿಕ್ಷಣ, ವಚನ ಸಾಹಿತ್ಯ ಮೊದಲಾದ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಭಕ್ತರಿಗೆ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ ಎಂದು ಶಿವಪ್ಪ ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಪ್ರಧಾನ ಕಾರ್‍ಯದರ್ಶಿ ಸಾಂಬ ಶಿವಯ್ಯ, ಖಜಾಂಚಿ ಉದಯ ಕುಮಾರ್, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾಧ್ಯಕ್ಷ ಎಚ್.ಎಂ. ಮಧುಸೂದನ್, ಸಮಾಜದ ಪ್ರಮುಖರಾದ ಎಂ.ಎಸ್. ಗಣೇಶ್ ಇದ್ದರು.