ಕನ್ನಡಪ್ರಭ ವಾರ್ತೆ ಭದ್ರಾವತಿ
ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರು ಪೂರ್ಣಿಮೆ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಅದ್ದೂರಿಯಾಗಿ ಜರುಗಿತು.ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರ ಸಂಕೀರ್ತನೆ, ೯.೩೦ರಿಂದ ಬಾಲವಿಕಾಸ ಮಕ್ಕಳಿಂದ ಗುರುಗಳಿಗೆ ಪಾದಪೂಜೆ ನೆರವೇರಿತು. ನಂತರ ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಸಾಯಿ ಸಹಸ್ರನಾಮ ಅರ್ಚನೆ ಹಾಗೂ ಮಧ್ಯಾಹ್ನ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಜರುಗಿತು.
ಸಂಜೆ ವೇದಪಠಣ, ಶ್ರೀ ಸಾಯಿ ಪಾದುಕ ಅಷ್ಟೋತ್ತರ, ಭಜನೆ ಮತ್ತು ಚಿಂತನ, ಮಂಗಳಾರತಿ ಹಾಗೂ ಪ್ರದಾದ ವಿನಿಯೋಗ ಸೇರಿದಂತೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಬೆಳಿಗ್ಗೆ ೭ ಗಂಟೆಯಿಂದ ವಿಶೇಷ ಆಲಂಕಾರದೊಂದಿಗೆ ಶಿರಡಿ ಸಾಯಿ ಬಾಬಾರವರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಅಲ್ಲದೆ ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿರುವ ಎಲ್ಲಾ ದೇವರುಗಳಿಗೆ ಅಲಂಕಾರ ಕೈಗೊಳ್ಳಲಾಗಿತ್ತು. ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ದರ್ಶನ ಪಡೆದರು. ತೀರ್ಥಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಸಂಚಾಲಕರು ಮತ್ತು ಪದಾಧಿಕಾರಿಗಳು, ಶ್ರೀ ಪ್ರಶಾಂತಿ ಸೇವಾ ಟ್ರಸ್ಟ್ ಹಾಗೂ ಶ್ರೀ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಹಾಜರಿದ್ದರು.