ಹುಬ್ಬಳ್ಳಿ: ಬೆಂಗಳೂರು ನಗರ ವ್ಯಾಪ್ತಿಯಿಂದ ದೂರವಿರುವ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಸಂಸ್ಕೃತ ಪಾಠಶಾಲಾ ಶಿಕ್ಷಕರನ್ನು ಜನಗಣತಿ 2027ರ ಗಣತಿದಾರರ ಪಟ್ಟಿಯಿಂದ ಬಿಡುಗೆಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಸಂಸ್ಕೃತ ಪಾಠಶಾಲಾ ಶಿಕ್ಷಕರು ಭಾನುವಾರ ಇಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಂಸ್ಕೃತ ವಿವಿ ಅಡಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ವ್ಯಾಪ್ತಿಗೆ ಬರುವ ಬೆಳಗಾವಿ ವಿಭಾಗದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳ ಅನುದಾನಿತ ಸಂಸ್ಕೃತ ಪಾಠ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಜನಗಣತಿ ಕಾರ್ಯಕ್ಕೆ ಗಣತಿದಾರರನ್ನಾಗಿ ದೂರದ ಬೆಂಗಳೂರು ನಗರ ವ್ಯಾಪ್ತಿಗೆ ನಿಯೋಜಿಸಿದೆ. ಇದರಿಂದ ಇಷ್ಟು ದೂರದ ನಗರ, ಪಟ್ಟಣ, ಗ್ರಾಮೀಣ ಪ್ರದೇಶದಿಂದ ತೆರಳಿ ಗಣತಿ ಕಾರ್ಯ ನಿರ್ವಹಿಸಲು ಅನನುಕೂಲತೆ, ತೊಂದರೆಯಾಗುತ್ತಿದೆ. ಬೆಳಗಾವಿ ವಿಭಾಗದ ಜಿಲ್ಲೆಗಳಿಂದ ಸುಮಾರು 400ರಿಂದ 650 ಕಿ.ಮೀ. ದೂರದ ಬೆಂಗಳೂರಿಗೆ ಬಂದು ಗಣತಿ ಕಾರ್ಯ ನಿರ್ವಹಿಸುವುದು ಕಷ್ಟವಾಗುತ್ತದೆ ಎಂದು ಸಂಸ್ಕೃತ ಶಿಕ್ಷಕರು ಸಭಾಪತಿಗಳ ಎದುರು ಅಳಲು ತೋಡಿಕೊಂಡರು.

ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಸಂಸ್ಕೃತ ಪಾಠಶಾಲಾ ಶಿಕ್ಷಕರನ್ನು ಬೆಂಗಳೂರು ನಗರದ ಗಣತಿ ಕಾರ್ಯದಿಂದ ಬಿಡುಗಡೆಗೊಳಿಸಿ ನಮ್ಮ ಶಾಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಸಂಸ್ಕೃತ ಪಾಠಶಾಲಾ ಶಿಕ್ಷಕರ ಪರವಾಗಿ ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ.ಎನ್. ಹೊಸೂರ ನೇತೃತ್ವದಲ್ಲಿ ಸಭಾಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಬಾಗಲಕೋಟ ಜಿಲ್ಲಾಧ್ಯಕ್ಷ ಮಹಾಂತೇಶ ಅಂಗಡಿ, ಬಿ.ಎಸ್. ಗಡಾದ, ಎಸ್.ಡಿ. ಕರಾಡೆ, ಜಗದೀಶ ಕರೆಪ್ಪನ್ನವರ, ಬಸವರಾಜ ಯಂಡಿಗೇರಿ, ವಿಜಯಕುಮಾರ ನಿಡಗುಂದಿ, ಸುನಂದಾ ರಾಸನಕರ, ವಿನಯಾ ಕುಲಕರ್ಣಿ ಹಾಗೂ ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳ ಅನುದಾನಿತ ಸಂಸ್ಕೃತ ಪಾಠಶಾಲಾ ಶಿಕ್ಷಕರು, ಶಿಕ್ಷಕರ ಸಂಘದ ಪದಾಧಿಕಾರಿಗಳಿದ್ದರು.

ಸರ್ಕಾರಕ್ಕೆ ಹೊರಟ್ಟಿ ಪತ್ರ:


ಬೆಳಗಾವಿ ವಿಭಾಗದ ಸಂಸ್ಕೃತ ಪಾಠಶಾಲಾ ಶಿಕ್ಷಕರ ಮನವಿ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸಂಬಂಧಿಸಿದ ಆಯುಕ್ತರಿಗೆ ದೂರವಾಣಿ ಮೂಲಕ ಮಾತನಾಡಿ, ದೂರದ ಜಿಲ್ಲೆಗಳಿಂದ ಶಿಕ್ಷಕರನ್ನು ಗಣತಿ ಕಾರ್ಯದಿಂದ ಕೈಬಿಡಬೇಕೆಂದು ಸೂಚಿಸಿದರು. ಅದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಲ್ಲದೇ ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಹೊರಟ್ಟಿ ಪತ್ರ ಬರೆದು ಆಗ್ರಹಿಸಿದ್ದಾರೆ.