ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದ ನಂತರವೂ ಅನಧಿಕೃತವಾಗಿ ಡಿಜಿಟಲ್ ಜಾಹೀರಾತುಗಳನ್ನು ಅಳವಡಿಸಲಾಗುತ್ತಿದೆ. ಅಂತಹ ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಂಗಳವಾರ ಜಿಬಿಎ ಕಚೇರಿಯಲ್ಲಿ ಸಭೆ ನಡೆಸಿ ಮಾಹಿತಿ ಹಂಚಿಕೊಂಡ ಅವರು, ಪರವಾನಗಿ ಪಡೆದಿರುವವರು ಕೂಡ ನಿಯಮಗಳನ್ನು ಉಲ್ಲಂಘಿಸಿ ಜಾಹೀರಾತು ಅಳವಡಿಸಿಕೊಳ್ಳುತ್ತಿದ್ದಾರೆ. ಅನುಮೋದಿತ ಉದ್ದೇಶಕ್ಕಿಂತ ಭಿನ್ನವಾಗಿ ವಾಣಿಜ್ಯ ಉದ್ದೇಶಗಳಿಗಾಗಿ ಜಾಹೀರಾತು ಅಳವಡಿಸಿಕೊಂಡು ಪರವಾನಗಿ ಅನುಮತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಇನ್ನು ನಗರದಲ್ಲಿ ಕಟ್ಟಡ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ವಾಹನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅದರ ಜೊತೆಗೆ ವಾಹನಗಳಲ್ಲಿ ಜಿಪಿಎಸ್ ಅನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ನಿಯಮಗಳನ್ನು ಪಾಲಿಸದ ವಾಹನಗಳ ವಿರುದ್ಧ ಕೇಸ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಮನೆ ಮನೆಗೆ ಇ ಖಾತಾ ವಿತರಣೆ ಸಿದ್ಧತೆಗೆ ಸೂಚನೆ: ಜಿಬಿಎ ವ್ಯಾಪ್ತಿಯಲ್ಲಿರುವ ಸುಮಾರು 23 ಲಕ್ಷ ಆಸ್ತಿಗಳಿಗೆ ಸರ್ಕಾರದಿಂದಲೇ ಮನೆ-ಮನೆಗೆ ಇ-ಖಾತೆಗಳನ್ನು ವಿತರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮವಹಿಸಬೇಕು ಎಂದು ಜಿಬಿಎ ಕಂದಾಯ ವಿಭಾಗದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.ಎಲ್ಲಾ ಆಸ್ತಿಗಳಿಗೆ ಖಾತೆ ಮಾಡಿಕೊಟ್ಟು, ಆಸ್ತಿ ತೆರಿಗೆಯನ್ನು ಪರಿಣಾಮಕಾರಿಯಾಗಿ ಸಂಗ್ರಹಿಸುವ ಕೆಲಸ ಮಾಡಬೇಕು. ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡುವ ಪ್ರಕ್ರಿಯೆಗೆ ವೇಗ ನೀಡಬೇಕು. ಜಿಐಎಸ್, ಡ್ರೋನ್ ಹಾಗೂ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಸ್ಕಾಂ, ಜಲಮಂಡಳಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಆಸ್ತಿಗಳ ಮಾಹಿತಿಯನ್ನು ಏಕೀಕರಿಸಿ, ತೆರಿಗೆ ವ್ಯಾಪ್ತಿಗೆ ಒಳಪಡದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.
