ಕನ್ನಡಪ್ರಭ ವಾರ್ತೆ ಮುಧೋಳ

ಮುಧೋಳ ನಗರದಲ್ಲಿ ಭಾನುವಾರ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗವಹಿಸಿ ರೇಣುಕಾಚಾರ್ಯರ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ಲಿಂಗಾಯತ ಸಮುದಾಯದ ಮಹಾನ್ ಆಚಾರ್ಯರಾಗಿ ಸಮಾನತೆ, ಕಾಯಕದ ಮಹತ್ವ, ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಸುಧಾರಣೆಯ ಸಂದೇಶ ನೀಡಿದ್ದರು. ಅವರ ಆದರ್ಶಗಳು ಇಂದಿಗೂ ಸಮಾಜದಲ್ಲಿ ಸಾಮಾನ್ಯತೆ, ಶ್ರಮದ ಗೌರವ ಮತ್ತು ಏಕತೆ ಬೆಳೆಸುತ್ತಿವೆ. ರೇಣುಕಾಚಾರ್ಯರ ಜಯಂತಿ ಆಚರಣೆಯ ಮೂಲಕ ಅವರ ಬೋಧನೆಗಳು ಇನ್ನಷ್ಟು ಜನರಿಗೆ ತಲುಪುವಂತೆ ಮಾಡಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವಂತಾಗಲಿ ಎಂದು ಹೇಳಿದರು.

ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಶಿವಾನಂದ ಉದಪುಡಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ರೇಣುಕಾಚಾರ್ಯರ ಭಕ್ತರು, ಕಾಂಗ್ರೆಸ್ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.