ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹ

| Published : Sep 27 2025, 01:00 AM IST

ಸಾರಾಂಶ

ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ 432 ಪದವಿ ಕಾಲೇಜುಗಳಲ್ಲಿ 6000 ಖಾಯಂ ಉಪನ್ಯಾಸಕರಲ್ಲಿ 3000ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಪಡೆದಿದ್ದು, ಇನ್ನೂ ಕೇವಲ 3000 ಖಾಯಂ ಉಪನ್ಯಾಸಕರೊಂದಿಗೆ 12,000 ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿವೆ. ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು. ಆದರೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಸರ್ಕಾರಗಳು ಕರ್ತವ್ಯಪ್ರಜ್ಞೆ ಮರೆತು ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ಕ್ರಮಕೈಗೊಳ್ಳದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದರು.2025-26ನೇ ಸಾಲಿನಲ್ಲಿ ಖಾಲಿ ಇರುವ 12,000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 55 ಸಾವಿರ ಅರ್ಜಿ ಸಲ್ಲಿಕೆಯಾಗಿವೆ. ಎಲ್ಲಾ ವಿವಿಗಳಲ್ಲಿ ತರಗತಿ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ತರಗತಿಗಳು ನಡೆಯುತ್ತಿಲ್ಲ. ಹೀಗಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಹಕಾರ್ಯದರ್ಶಿ ನಂದನ್.ಎಂ, ಚೇತನ್, ಸಚಿನ್, ಧನಂಜಯ, ವರುಣ್, ಕಾರ್ತೀಕ್, ಪ್ರವೀಣ್ ಇತರರಿದ್ದರು.