ಬಂಗಾರಪೇಟೆ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರದ ಬರಲಿದ್ದು ಅದರಲ್ಲಿ ಕ್ಷೇತ್ರದ ಶಾಸಕರಾದ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಬಿ. ನಾರಾಯಣಸ್ವಾಮಿ ಕಾಂಗ್ರೆಸ್ ಹೈಕಮಾಂಡ್ನ್ನು ಒತ್ತಾಯಿಸಿದ್ದಾರೆ.
ಶಾಸಕ ನಾರಾಯಣಸ್ವಾಮಿ ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಜಿಲ್ಲೆಯಲ್ಲಿರುವ ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಹಿರಿಯ ಶಾಸಕರಾಗಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಪಕ್ಷವನ್ನು ಭದ್ರಕೋಟೆಯಾಗಿ ರೂಪಿಸಿ ವಿರೋಧ ಪಕ್ಷಗಳಿಗೆ ನೆಲೆ ಇಲ್ಲದಂತೆ ಶ್ರಮಿಸಿದ್ದಾರೆ.ಇಂತಹ ಶಾಸಕರಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಸಚಿವ ಸ್ಥಾನ ನೀಡಲು ಒತ್ತಡ ಇತ್ತಾದರೂ ಮುಂದಿನ ಸಂಪುಟ ಪುನಾರಚಣೆಯಲ್ಲಿ ಖಚಿತವಾಗಿ ಸಚಿವ ಸ್ಥಾನ ಕೊಡಲಾಗುವುದು ಎಂದು ಹೈಕಮಾಂಡ್ ಭರವಸೆ ನೀಡಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಮಾಡಿತ್ತು. ಈಗ ಕಾಲ ಕೂಡಿ ಬಂದಿದೆ ಹೈಕಮಾಂಡ್ ನೀಡಿದ ಭರವಸೆಯೆಂತೆ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲಿ, ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡದೆ ಎಲ್ಲಾ ಸರ್ಕಾರಗಳಲ್ಲಿಯೂ ಹೊರಗಿನವರಿಗೆ ನೀಡುವ ಮೂಲಕ ಅಭಿವೃದ್ಧಿಗೆ ಹಿನ್ನಡೆಯಾಗಿದೆ, ಈ ತಾರತಮ್ಯವನ್ನು ಸರಿಪಡಿಸಲು ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನಾರಾಯಣಸ್ವಾಮಿಗೆ ಸಂಪುಟದಲ್ಲಿ ಸ್ಥಾನ ಮಾನ ನೀಡಬೇಕೆಂದು ಒತ್ತಾಯಿಸಿದರು.