ಬಿಜೆಪಿಯಿಂದ ದೇವರಾಜೇಗೌಡರನ್ನು ಉಚ್ಚಾಟಿಸುವಂತೆ ಮನವಿ

| Published : Oct 03 2024, 01:25 AM IST

ಸಾರಾಂಶ

ಚುನಾವಣೆ ವೇಳೆ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಆದೇಶವನ್ನು ಪಾಲನೆ ಮಾಡದೇ ಅವರು ಕೋವಿಡ್ ಸಂದರ್ಭದಲ್ಲಿ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ, ಕೇಂದ್ರದಲ್ಲಿ ಪ್ರಧಾನಿ ಮೋದಿಜೀಯವರ ಸಾಧನೆ ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಾಧನೆಗಳ ಪ್ರಚಾರ ಮಾಡದೇ ಪಕ್ಷದ ವರ್ಚಸ್ಸಿಗೆ ಕುಂದು ಉಂಟು ಮಾಡಿದ್ದರಿಂದ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿತು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಹೊಳೆನರಸೀಪುರ ಕ್ಷೇತ್ರದ ೨೦೨೩ ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದರು ಎಂದು ಸುದ್ದಿವಾಹಿನಿ ಒಂದರಲ್ಲಿ ಟೀಕಿಸಿದ್ದಾರೆ. ಪಕ್ಷದ ನಾಯಕರ ಆದೇಶಗಳ ವಿರುದ್ಧ ನಡುವಳಿಕೆ ಮತ್ತು ಅನುಕೂಲಸಿಂಧು ರಾಜಕಾರಣ ಮಾಡುತ್ತಿರುವ ದೇವರಾಜೇಗೌಡರ ವರ್ತನೆಯಿಂದ ಪಕ್ಷದ ವರ್ಚಸ್ಸಿಗೆ ಇನ್ನೂ ಹೆಚ್ಚಿನ ಧಕ್ಕೆ ಆಗುವ ಮುನ್ನ ಪಕ್ಷದಿಂದ ಉಚ್ಚಾಟಿಸುವಂತೆ ಬಿಜೆಪಿ ಮಂಡಲ ನಿಕಟಪೂರ್ವ ಅಧ್ಯಕ್ಷ ಮಳಲಿ ನಾರಾಯಣ್ ರಾಜ್ಯಧ್ಯಕ್ಷರಿಗೆ ಮನವಿ ಮಾಡಿದರು.

ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ವೇಳೆ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಆದೇಶವನ್ನು ಪಾಲನೆ ಮಾಡದೇ ಅವರು ಕೋವಿಡ್ ಸಂದರ್ಭದಲ್ಲಿ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ, ಕೇಂದ್ರದಲ್ಲಿ ಪ್ರಧಾನಿ ಮೋದಿಜೀಯವರ ಸಾಧನೆ ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಾಧನೆಗಳ ಪ್ರಚಾರ ಮಾಡದೇ ಪಕ್ಷದ ವರ್ಚಸ್ಸಿಗೆ ಕುಂದು ಉಂಟು ಮಾಡಿದ್ದರಿಂದ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿತು ಎಂದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಪಕ್ಷದ ವರಿಷ್ಠರು ಮಾಡಿಕೊಂಡ ಹೊಂದಾಣಿಕೆ ಮತ್ತು ನೀಡಿದ ಆದೇಶದಂತೆ ನಾವು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆವು. ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ರೀತಿಯಲ್ಲಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇನೆ ಎಂದು ಮಾಧ್ಯಮದ ಮೂಲಕ ಹೇಳಿಕೆ ನೀಡಿ, ಮತದಾರರಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಆದ್ದರಿಂದ ನಮ್ಮ ಮಂಡಲ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ದೇವರಾಜೇಗೌಡರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಪಕ್ಷದಿಂದ ಉಚ್ಚಾಟಿಸುವಂತೆ ವಿನಂತಿಸುತ್ತೇವೆ ಎಂದರು.

ರಾಜ್ಯ ಪರಿಷತ್ ಮಾಜಿ ಸದಸ್ಯ ಎಂ.ಎನ್.ರಾಜು, ಹಳೇಕೋಟೆ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯುಕ್ಷ ಹರಿಹರಪುರ ವೆಂಕಟೇಶ್ ಇದ್ದರು.