ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ 16 ವರ್ಷದ ಬಾಲಕಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ 16 ವರ್ಷದ ಬಾಲಕಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಗುರುವಾರ ಬೆಳಿಗ್ಗೆ 11.30 ರ ಸುಮಾರಿಗೆ ರಾಮಮೂರ್ತಿನಗರದ ಎನ್ಆರ್ಐ ಲೇಔಟ್ನಲ್ಲಿ ಅಪಾರ್ಟ್ಮೆಂಟ್ವೊಂದರ ಕಟ್ಟಡದ ಐದನೇ ಮಹಡಿ ಹತ್ತಿದ್ದ ಬಾಲಕಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಜೋರಾಗಿ ಕಿರುಚಲು ಪ್ರಾರಂಭಿಸಿದ್ದಾಳೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ತುರ್ತು ಸಹಾಯವಾಣಿಯಾದ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿ ಬಂದ ಹೊಯ್ಸಳ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯನ್ನು ರಕ್ಷಿಸುತ್ತಿದಂತೆ ಸ್ಥಳದಲ್ಲಿದ್ದವರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆಕೆಯನ್ನು ಕೌನ್ಸೆಲಿಂಗ್ಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಬಗ್ಗೆ ತನಿಖೆ ನಡೆಯುತ್ತಿದೆ. ಬಾಲಕಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.