(ಟಿಂಟ್) ಕಾಲು ಜಾರಿ ಭದ್ರಾ ನದಿಗೆ ಬಿದ್ದ ಯುವಕನ ರಕ್ಷಣೆ

| Published : Nov 04 2024, 12:31 AM IST

ಸಾರಾಂಶ

ಸೇತುವೆ ಮೇಲಿಂದ ಆಯ ತಪ್ಪಿ ಭದ್ರಾ ನದಿಗೆ ಬಿದ್ದ ಯುವಕನನ್ನು ಅಗ್ನಿಶಾಮಕ ಇಲಾಖೆ ತಂಡ ರಕ್ಷಿಸಿರುವ ಘಟನೆ ಭಾನುವಾರ ಬೆಳಗಿನ ಜಾವ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿ: ಸೇತುವೆ ಮೇಲಿಂದ ಆಯ ತಪ್ಪಿ ಭದ್ರಾ ನದಿಗೆ ಬಿದ್ದ ಯುವಕನನ್ನು ಅಗ್ನಿಶಾಮಕ ತಂಡ ರಕ್ಷಣೆ ಮಾಡಿರುವ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

ನಗರದ ಬೈಪಾಸ್ ರಸ್ತೆ, ಆನೆಕೊಪ್ಪ ನಗರಸಭೆ ಪಂಪ್ ಹೌಸ್ ಸಮೀಪದ ಹೊಸ ಸೇತುವೆ ಮೇಲೆ ದುರ್ಘಟನೆ ನಡೆದಿದ್ದು, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡದ ಯಶಸ್ವಿ ಕಾರ್ಯಾಚರಣೆಯಿಂದಾಗಿ ಪವನ್(25) ಪ್ರಾಣಾಪಾಯದಿಂದ ಪಾರಾಗಿದ್ದಾನೆ.

*ಘಟನೆ ವಿವರ: ಕಾರಿನಲ್ಲಿ ಬೆಂಗಳೂರಿಗೆ ತೆರಳಲು ಹೊಸದಾಗಿ ನಿರ್ಮಾಣಗೊಂಡಿರುವ ಸೇತುವೆ ಮೇಲೆ ಬೆಳಗಿನ ಜಾವ ಸುಮಾರು 5:30ರ ಸಮಯದಲ್ಲಿ ಕಾರು ನಿಲ್ಲಿಸಿ ಪೂಜೆ ಸಲ್ಲಿಸಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಕತ್ತಲೆ ಇದ್ದ ಕಾರಣ ಸೇತುವೆ ಒಂದು ಬದಿಯಲ್ಲಿ ನಿಂತಿದ್ದ ಪವನ್ ಆಕಸ್ಮಿಕವಾಗಿ ಕಾಲು ಜಾರಿ ಸೇತುವೆಯಿಂದ ನದಿಗೆ ಬಿದ್ದಿದ್ದಾನೆ. ಜೊತೆಯಲ್ಲಿದ್ದವರು ತಕ್ಷಣ ಆಗ್ನಿಶಾಮಕ ಇಲಾಖೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ತಂಡ ಸುಮಾರು 1 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಪವನ್ ನದಿಗೆ ಬಿದ್ದ ಸ್ಥಳದಲ್ಲಿ ಹೆಚ್ಚಿನ ನೀರು ಇಲ್ಲದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಆಂಬ್ಯುಲೆನ್ಸ್ ನೆರವಿನೊಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ವಸಂತಕುಮಾರ್, ಸಿಬ್ಬಂದಿಗಳಾದ ಬಾಬು ಎಸ್.ಗೌಡ, ಪಿ.ಮಂಜುನಾಥ್, ಬಾಬಲು ಮಾನಿಕ ಬಾಯ್, ಪ್ರಜ್ವಲ್, ಉದಯ್, ಹಿರೇಮಠ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.