ಉಡುಪಿ: ಇಂದಿನ ದಿನಗಳಲ್ಲಿ ಓದು, ಸಂಶೋಧನೆಗಳು ದೂರ ಸರಿಯುತ್ತಿವೆ. ವಿಸ್ತಾರವಾದ ಅಧ್ಯಯನ ಮತ್ತು ಕ್ಷೇತ್ರಕಾರ್ಯಗಳಿಂದಷ್ಟೇ ನಿಜ ಸತ್ಯದರ್ಶನವಾಗಬಲ್ಲವು. ಆಳ ಅಧ್ಯಯನಗಳನ್ನು ಅಪೇಕ್ಷೆಪಡುವ ಇಂತಹ ಕ್ಷೇತ್ರಗಳು ಇಂದು ಬಡವಾಗುತ್ತಿವೆ ಎಂದು ಹಿರಿಯ ವಿದ್ವಾಂಸ ಸಂಶೋಧಕ ಪ್ರೊ. ಬಿ. ಎ. ವಿವೇಕ ರೈ ಕಳವಳ ವ್ಯಕ್ತಪಡಿಸಿದರು. ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ಎಜುಕೇಶನ್, ಚೇಳಾರುಗುತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್ ಹೆಗ್ಗಡೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಶಸ್ತಿ ಸ್ವೀಕರಿಸಿದ ಹಿರಿಯ ಲೇಖಕ, ಸಂಶೋಧಕ ಡಾ. ಬಿ. ಶಿವರಾಮ ಶೆಟ್ಟಿ ಅವರು, ಸಂಶೋಧನೆ ಎಂದರೆ ಹೊಸತನ್ನು ಹೇಳುವುದಲ್ಲ ಇಲ್ಲದ್ದನ್ನೂ ಹೇಳುವುದಲ್ಲ, ಬದಲು ಆಳವಾದ ಅಭ್ಯಾಸದ ಫಲವಾಗಿ ಒಡಮೂಡುವ ವಿಶಿಷ್ಟ ಸತ್ಯ. ಆ ಬಗೆಯ ಸತ್ಯದ ಹೊಳಹುಗಳಿಗೆ ಕಾಲಾತೀತವಾಗಿ ಎಂದೂ ಸಮಸ್ಯೆಗಳು ಬರುವುದಿಲ್ಲ. ಅಂತಹ ಅಧ್ಯಯನಗಳು ಪರಾಂಬರಿಸಿ ನೋಡುವುದರಿಂದ ಸಾಧ್ಯವಾಗುತ್ತದೆ ಎಂದರು. ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಚೇತನ್ ಮುಂಡಾಜೆ ಅಭಿನಂದನಾ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಜಿ. ಪೈ ಉಪಸ್ಥಿತರಿದ್ದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಶಸ್ತಿಯ ಪ್ರಾಯೋಜಕರಾದ ಚೇಳಾರುಗುತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಡಾ. ಇಂದಿರಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾದರು. ನಾಗರಾಜ ಶಂಕರನಾರಾಯಣ ಪ್ರಾರ್ಥಿಸಿದರು. ಆರ್.ಆರ್.ಸಿಯ ಸಹಸಂಶೋಧಕ ಡಾ. ಅರುಣ್‌ಕುಮಾರ್‌ ಎಸ್.ಆರ್. ನಿರೂಪಿಸಿ, ವಂದಿಸಿದರು.