ಕೊಪ್ಪಳ: ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಿರದೆ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಜವಾಬ್ದಾರಿಯುತ ಕಾರ್ಯವಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಡಾಣಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಪಿಎಂ-ಉಷಾ ಪ್ರಾಯೋಜಕತ್ವ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಸುಧಾರಿತ ಸಂಶೋಧನಾ ಪರಿಕರಗಳು ಕುರಿತು ಆಯೋಜಿಸಲಾದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಶೋಧನೆ ಎಂದರೆ ಸತ್ಯ ಅನ್ವೇಷಿಸುವುದು ಮತ್ತು ಹೊಸ ಜ್ಞಾನ ಸಮಾಜಕ್ಕೆ ಪರಿಚಯಿಸುವುದು. ಉತ್ತಮ ಸಂಶೋಧನೆ ಮಾನವ ಕುಲದ ಅಭಿವೃದ್ಧಿಗೆ ಪೂರಕವಾಗುತ್ತದೆ. ಇಂದಿನ ಕಾಲದಲ್ಲಿ ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನ ಪರಿಣಾಮಕಾರಿಯಾಗಿ ಬಳಸಿಕೊಂಡು ಸಂಶೋಧನೆ ನಡೆಸಬೇಕು. ಪ್ರತಿಯೊಬ್ಬರೂ ಸಂಶೋಧನೆಯ ಮೂಲಕ ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಆನಂದಹಳ್ಳಿ ಮಾತನಾಡಿ, ಇಂದಿನ ಜಗತ್ತಿನಲ್ಲಿ ದತ್ತಾಂಶವೇ ಸಂಪತ್ತು.ಕೃತಕ ಬುದ್ಧಿಮತ್ತೆ ದತ್ತಾಂಶದ ಆಧಾರದ ಮೇಲೆಯೇ ಕಾರ್ಯ ನಿರ್ವಹಿಸುತ್ತಿದ್ದು, ಸಂಶೋಧಕರು ದತ್ತಾಂಶದ ಮಹತ್ವ ಅರಿತು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವೈ.ಬಿ. ಅಂಗಡಿ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕರು ಮತ್ತು ಪಿಎಂ ಉಷಾ ಸಂಚಾಲಕಿ ಸುಧಾ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರಕಾಶ್ ಗೌಡ ಸ್ವಾಗತಿಸಿದರು. ಇತಿಹಾಸ ವಿಭಾಗದ ಅಧ್ಯಾಪಕಿ ವಿಜಯಲಕ್ಷ್ಮೀ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಸಂತೋಷಿಕುಮಾರಿ ವಂದಿಸಿದರು.


ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನೆ ಮುಗಿದ ನಂತರ ಮೊದಲನೇ ತಾಂತ್ರಿಕ ಅಧಿವೇಶನದಲ್ಲಿ ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ರಮೇಶ್ ಕೆ ಎಐ ಯುಗದಲ್ಲಿ ಸಂಶೋಧನೆ ಕುರಿತು ವಿಶೇಷ ಉಪನ್ಯಾಸ ಮಂಡಿಸಿದರು. ಎರಡನೇ ತಾಂತ್ರಿಕ ಅಧಿವೇಶನದಲ್ಲಿ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಆನಂದ ಹಳ್ಳಿ ಸಂಶೋಧನೆ ಕಂಡು ಹಿಡಿಯುವ ಪರಿಕರ ಕುರಿತು ವಿಷಯ ಮಂಡಿಸಿದರು.