ಕನ್ನಡಪ್ರಭ ವಾರ್ತೆ ವಿಜಯಪುರ
ಮಹಿಳೆಯರಿಗೆ ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮೀಸಲಾತಿ ದೊರೆತರೆ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಧ್ವನಿ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಸಬಲಾ ಸ್ವಯಂಸೇವಾ ಸಂಸ್ಥೆಯ ಸಿಇಒ ಡಾ.ಮಲ್ಲಮ್ಮ ಯಾಳವಾರ ಅಭಿಪ್ರಾಯಪಟ್ಟರು.ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯ, ಐಕ್ಯೂಎಸಿ ಹಾಗೂ ಮಹಿಳಾ ಸಬಲೀಕರಣ ಕೋಶದ ಅಡಿಯಲ್ಲಿ ಮಹಿಳಾ ಸಬಲೀಕರಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಸಮಾನ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮಹಿಳಾ ಮೀಸಲಾತಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಮಾಜದಲ್ಲಿ ಮಹಿಳೆಯರ ನಾಯಕತ್ವ ಬೆಳೆಸಲು ಮತ್ತು ಸಮಾನತೆಯ ಮೌಲ್ಯಗಳನ್ನು ಬಲಪಡಿಸಲು ಈ ಮಸೂದೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜನವಾದಿ ಸಂಘಟನೆ ಅಧ್ಯಕ್ಷೆ ಅನಸೂಯಾ ಹಜೇರಿ ಮಾತನಾಡಿ, ಶಿಕ್ಷಣ, ಉದ್ಯೋಗ, ವಿಜ್ಞಾನ, ಆಡಳಿತ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಅದೇ ರೀತಿ ರಾಜಕೀಯ ಕ್ಷೇತ್ರದಲ್ಲಿಯೂ ಅವರ ಧ್ವನಿ ಬಲವಾಗಿರಬೇಕೆಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವೈ.ತಮ್ಮಣ್ಣ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆ ಕೇವಲ ಮೀಸಲಾತಿಯ ವಿಷಯವಲ್ಲ. ಅದು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಹಿಳಾ ಸಬಲೀಕರಣದತ್ತ ಇಡುತ್ತಿರುವ ಮಹತ್ವದ ಹೆಜ್ಜೆಯಾಗಿದೆ. ವಿದ್ಯಾರ್ಥಿಗಳು ಇಂತಹ ಜಾಗೃತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂವಿಧಾನಾತ್ಮಕ ಮೌಲ್ಯಗಳು, ಮಹಿಳಾ ಹಕ್ಕುಗಳು ಮತ್ತು ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಹೊಂದಬೇಕು. ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಹಿಳಾ ಸಬಲೀಕರಣದ ಸಂಯೋಜನಾಧಿಕಾರಿ ಅನಿತಾ ಡೊಳ್ಳಿ ಕಾರ್ಯಕ್ರಮ ಸಂಯೋಜಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರೊ.ವ್ಹಿ.ಎಸ್.ನಂದೀಶ ಸ್ವಾಗತಿಸಿ, ಪರಿಚಯಿಸಿದರು. ಚಂದ್ರಕ್ಕ ಕುಚನೂರು ಪ್ರಾರ್ಥಿಸಿದರು. ಆರತಿ ಬೇಲೂರು ಮತ್ತು ಸಂಗಡಿಗರು ಮಹಿಳಾ ಗೀತೆಯನ್ನು ಹಾಡಿದರು. ಚಂದ್ರಕಲಾ ದೊಡಮನಿ ನಿರೂಪಿಸಿದರು. ಶ್ವೇತಾ ತಡವಲಗಾ ವಂದಿಸಿದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಯೋಜನಾಧಿಕಾರಿ ಡಾ.ಭಕ್ತಿ ಮಹೀಂದ್ರಕರ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.