ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ
ಕನ್ನಡಪ್ರಭ ವಾರ್ತೆ ಕಾರವಾರಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ ಸಮಸ್ಯೆ ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ತಕ್ಷಣವೇ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ದೌರ್ಜನ್ಯದ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಮೀಸಲಿಟ್ಟ ನಿವೇಶಗಳನ್ನು ಅತಿಕ್ರಮಣ ಮಾಡಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು ಈ ಬಗ್ಗೆ ಸಮಗ್ರ ವರದಿ ನೀಡುವಂತೆ ತಿಳಿಸಿದ ಅವರು, ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ವೈ.ಕೆ. ಇದ್ದರು.ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳ ಸಾಧನೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ. 7ರಂದು ನಡೆದ ಫಸ್ಟ್ ಕರ್ನಾಟಕ ಓಪನ್ ರಿಲೇ ಕಾಂಪಿಟೀಶನ್ ನಲ್ಲಿ ಕಾರವಾರ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು, 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಾವಿತ್ರಿ ಮಿರಾಶಿ, ಭೂಮಿಕಾ ಮೋರೆ, ಚಾಮುಂಡೇಶ್ವರಿ ಮಿರಾಶಿ, ನಯನಾ ಚೆನ್ನಯ್ಯ ಅವರನ್ನು ಒಳಗೊಂಡ ತಂಡ 4x100 ಮೀ ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ 16 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಿಯಾ ಪವಾರ, ಕಾಂಚನಾ ಕವರೇಕರ, ಕೋಮಲಾ ಟೆಕ್ಕೇಕರ ಅವರನ್ನು ಒಳಗೊಂಡ ತಂಡ 4x100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಮತ್ತು ಮೆಡ್ಲೆ ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಈ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ ಅಭಿನಂದನೆ ಸಲ್ಲಿಸಿದ್ದಾರೆ.