ಕೋಮುಲ್‌ ಶುದ್ಧೀಕರಣದ ಸಂಕಲ್ಪ ಮಾಡಿ

| Published : Jun 25 2025, 11:47 PM IST

ಸಾರಾಂಶ

ಒಕ್ಕೂಟದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂಬುದನ್ನು ಆಡಳಿತದಲ್ಲಿದ್ದ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡಿ ಆರೋಪಿಸಿದ್ದು, ಇದರ ಸತ್ಯಾಸತ್ಯತೆ ಅರಿಯಲು ಸಮಗ್ರ ತನಿಖೆ ಅಗತ್ಯವಿದೆ. ಅಧಿಕಾರಕ್ಕೆ ಬಂದವರು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುವ ಪ್ರಯತ್ನ ನಡೆಸಿದ್ದು, ಜಿಲ್ಲೆಯ ರೈತರಿಗೆ ಅನ್ಯಾಯವಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕೋಲಾರಕೋಲಾರ ಹಾಲು ಒಕ್ಕೂಟದ ಚುನಾವಣೆ ಮುಗಿದಿದ್ದು, ಎನ್‌ಡಿಎ ಮೈತ್ರಿಯಡಿ ಗೆದ್ದಿರುವ ಅಭ್ಯರ್ಥಿಗಳು ಭ್ರಷ್ಟಾಚಾರದ ಆರೋಪದಿಂದ ನಲುಗಿ ಹೋಗಿರುವ ಕೋಮುಲ್ ಶುದ್ದೀಕರಣಕ್ಕೆ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕೋಲಾರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಾಲು ಒಕ್ಕೂಟ ಇತ್ತೀಚಿನ ದಿನಗಳಲ್ಲಿ ಭ್ರಷ್ಟತೆಯಲ್ಲಿ ಮುಳುಗಿ ರೈತರು, ಹಾಲು ಉತ್ಪಾದಕರ ಹಿತ ರಕ್ಷಣೆ ಮಾಡುವಲ್ಲಿ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ.ಹಗರಣಗಳ ತನಿಖೆಯಾಗಲಿ

ಒಕ್ಕೂಟದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂಬುದನ್ನು ಆಡಳಿತದಲ್ಲಿದ್ದ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡಿ ಆರೋಪಿಸಿದ್ದು, ಇದರ ಸತ್ಯಾಸತ್ಯತೆ ಅರಿಯಲು ಸಮಗ್ರ ತನಿಖೆ ಅಗತ್ಯವಿದೆ. ಶಾಶ್ವತ ನೀರಾವರಿ ಇಲ್ಲದ ಕೋಲಾರ ಜಿಲ್ಲೆಗೆ ಹೈನುಗಾರಿಕೆಯೇ ಜೀವಾಳವಾಗಿದೆ ಆದರೆ ರೈತರ ಈ ಸಂಸ್ಥೆಯನ್ನು ಅಧಿಕಾರಕ್ಕೆ ಬಂದವರು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುವ ಪ್ರಯತ್ನ ನಡೆಸಿದ್ದು, ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಯೋಜನೆಯ ಹಣವನ್ನು ಸಮರ್ಪಕವಾಗಿ ರೈತರಿಗೆ ನೀಡುವಲ್ಲಿ ವಿಫಲವಾಗಿದೆ ಎಂದು ತಿಳಿಸಿದ್ದಾರೆ.ರೈತರಿಗೆ ನ್ಯಾಯ ದೊರಕಿಸಿ

ಕೋಲಾರ ಹಾಲು ಒಕ್ಕೂಟಕ್ಕೆ ಎನ್‌ಡಿಎಯಿಂದ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರು ಹೆಚ್ಚಿನ ಜವಾಬ್ದಾರಿಯಿಂದ ಒಕ್ಕೂಟದಲ್ಲಿನ ಕೊಳಕನ್ನು ತೊಡೆದು ಹಾಕಬೇಕಾಗಿದೆ, ಅಲ್ಲಿ ಈವರೆಗೂ ರೈತರಿಗೆ ಆಗಿರುವ ವಂಚನೆ, ಅನ್ಯಾಯ ಕೊನೆಗೊಳಿಸಬೇಕು, ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಹಾಲು ಒಕ್ಕೂಟಕ್ಕೆ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಮತದಾರರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.