ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರುಸುರಕ್ಷತೆ ನಮ್ಮ ಕೈಯಲ್ಲಿದೆ. ಅದನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹೊಣೆಗಾರಿಕೆ. ಸಂಚಾರ ನಿಯಮಗಳನ್ನು ಗೌರವಿಸಿ ಎಲ್ಲರ ಜೀವ ಉಳಿಸುವುದು ಜವಾಬ್ದಾರಿ ಎಂದು ಚಿತ್ರನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ನಗರ ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆ ಜಂಟಿ ಆಶ್ರಯದಲ್ಲಿ ಫಿಜಾ ಬೈ ನೆಕ್ಸಸ್ ಮಾಲ್ನಲ್ಲಿ ಗುರುವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ ವಾಹನ ಕೊಡುವಾಗ ಹೆತ್ತವರು ಯೋಚಿಸಬೇಕು. ನಮ್ಮಿಂದಾಗಿ ಯಾರಿಗೂ ತೊಂದರೆಯಾಗಬಾರದು. ಎಲ್ಲರೂ ನಿಯಮ ಪಾಲನೆ ಮಾಡಿದಾಗ ದೇಶಕ್ಕೆ ಒಳ್ಳೆಯದಾಗಲಿದೆ ಎಂದರು.ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್, ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡಲಾಗುತ್ತದೆ. ರಸ್ತೆ ಅಪಘಾತದಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕಳೆದ ವರ್ಷ ಮಂಗಳೂರಿನಲ್ಲಿ 110 ಮಂದಿ ರಸ್ತೆ ಅಪಘಾತದಿಂದಾಗಿ ಪ್ರಾಣ ಕಳೆದು ಕೊಂಡಿದ್ದಾರೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ಕಡಿಮೆ ಮಾಡಲು ಸಾಧ್ಯ ಎಂದರು.ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್, ರವಿಶಂಕರ್, ಪಿ.ಉಮೆಶ್ , ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ , ಸಾರಿಗೆ ಉಪ ಆಯುಕ್ತ ಶ್ರೀಧರ ಕೆ ಮಲ್ಲಾಡ್, ಫಿಝಾ ಬೈ ನೆಕ್ಸಸ್ ಮಾಲ್ನ ಎಜಿಎಂ ಸುನೀಲ್ ಕೆ.ಎಸ್. ಇದ್ದರು. ಟ್ರಾಫಿಕ್ ವಾರ್ಡನ್ಗಳಾಗಿ ಸೇವೆ ಸಲ್ಲಿಸುತ್ತಿರುವ ಫ್ರಾನ್ಸಿಸ್ ಮಾಕ್ಸಿಮ್ ಮೊರಾಸ್, ಸುನಿಲ್ ಡಿಸೋಜಾ, ರೋಶನ್ ರಾಯ್ ಸಿಕ್ವೇರಾ ಮತ್ತು ರಮೇಶ್ ಕಾವೂರು ಇವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಗೆ ಸಂಚಾರಿ ವಿಷಯಗಳ ಬಗ್ಗೆ ರಸಪ್ರಶ್ನೆ ಏರ್ಪಡಿಸಿ, ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭ ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆಯ ಬಗ್ಗೆ ಬೀದಿ ನಾಟಕ ನಡೆಯಿತು.