ಸಾರಾಂಶ
ಕನ್ನಡಪ್ರಭ ವಾರ್ತೆ ಸಾಗರ
ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸಲಾಗುವುದು. ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಸ್ಠಾನಗೊಳಿಸುತ್ತಿದೆ ಎಂದರು.
94ಸಿ ಯೋಜನೆ ಗ್ರಾಮೀಣ ಬಡ ಜನರಿಗೆ ಹಕ್ಕುಪತ್ರ ನೀಡಿ ಅವರ ನೆಮ್ಮದಿಯ ಬದುಕಿಗೆ ಆಸರೆಯಾಗುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯ ಅನುಷ್ಠಾನಕ್ಕಾಗಿ ಅಂದು ಹಗಲಿರುಳು ಶ್ರಮಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಭಿನಂದನಾರ್ಹರು ಎಂದರು.ಜನಸ್ಪಂದನದಲ್ಲಿ ಗ್ರಾಮೀಣ ರಸ್ತೆ ಸಂಪರ್ಕ, ಗೃಹಲಕ್ಷ್ಮಿ ಸೌಲಭ್ಯ, ವಿದ್ಯುತ್ ಸಂಪರ್ಕ, ನಿವೇಶನ ಹಕ್ಕುಪತ್ರ, ಇ-ಸ್ವತ್ತು ಕೊಡಿಸಿ, ಶಾಲಾ ಕಾಪೌಂಡ್, ನೂತನ ಕಟ್ಟಡ ಮುಂತಾದ 120ಕ್ಕೂ ಹೆಚ್ಚಿನ ಅಹವಾಲುಗಳು ಸಲ್ಲಿಕೆ ಯಾದವು. ಇದೇ ಸಂದರ್ಭದಲ್ಲಿ ಸಾಮಾಜಿಕ ಭದ್ರಾತಾ ಯೋಜನೆಯಡಿಯಲ್ಲಿ ಸೌಲಭ್ಯಕ್ಕೆ ಅರ್ಹ ರಾದ ಪಲಾನುಭವಿಗಳಿಗೆ, ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ಹಾಗೂ ಅತಿವೃಷ್ಟಿಯಿಂದ ಮನೆ ಹಾನಿಗೋಳಗಾದ ಸಂತ್ರಸ್ತರಿಗೆ ಚೆಕ್ಕನ್ನು ಸಚಿವರು ವಿತರಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಯತೀಶ್ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀಮತಿ ಸುಜಾತ, ತಹಶೀಲ್ದಾರ್ ಚಂದ್ರಶೇಖರನಾಯ್ಕ್, ಕಾರ್ಯ ನಿರ್ವಹಕ ಅಧಿಕಾರಿ ಗುರುಕೃಷ್ಣ ಶೆಣೈ, ಪಂಚಾಯಿತಿ ಅಧ್ಯಕ್ಷರಾದ ಶಾಂತಕುಮಾರ್, ಲಷ್ಮಿನಾರಾಯಣ್, ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.