ಗದಗ: ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದಿಂದ ಅವರಿಗೆ ಸಿಗಬೇಕಾದ ವಿವಿಧ ಯೋಜನೆಗಳ ಸೌಲಭ್ಯ ಒದಗಿಸುವಿಕೆಯಲ್ಲಿ ಅಧಿಕಾರಿಗಳು ಹೆಚ್ಚಿನ ಆಸಕ್ತಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶನಿವಾರ ಮಹಿಳಾ ಸ್ಪಂದನಾ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ವಿವಿಧ ಇಲಾಖೆಗಳ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಭದ್ರತೆ ಯೋಜನೆಗಳಾದ ವಿಧವಾ ವೇತನ, ವೃದ್ಧಾಪ್ಯ ವೇತನಗಳ, ಪಿಂಚಣಿ ಸೌಲಭ್ಯ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿನಾಕಾರಣ ವಿಳಂಬ ಮಾಡಬಾರದು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಜತೆಗೆ ವಿದ್ಯಾರ್ಥಿಗಳ ರಕ್ಷಣೆ ಇಲಾಖೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಚಲನವಲನಗಳ ಕುರಿತು ಹಾಸ್ಟೆಲ್ ವಾರ್ಡನ್ಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದರು.ಈ ವೇಳೆ ಆಧಾರ್ ಅಪ್ಡೇಟ್, ಪಡಿತರ ಕಾರ್ಡ್ ಸೌಲಭ್ಯ, ಬಡ ಮಹಿಳೆಯರಿಗೆ ಮನೆ ಸೌಲಭ್ಯ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದವುಗಳ ಕುರಿತು ಅರ್ಜಿ ಸ್ವೀಕರಿಸಿದ ಆಯೋಗದ ಅಧ್ಯಕ್ಷರು, ಅವುಗಳ ವಿಲೇವಾರಿಗೆ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಅರ್ಜಿದಾರರಿಗೆ ಭರವಸೆ ನೀಡಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡ್ರ, ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಡಿಎಚ್ಒ ಡಾ. ಎಸ್.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಇದ್ದರು.