ಮಡಿಕೇರಿ: ಪೆಟ್ರೋಲ್ ಮಿತ ಬಳಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಸರ್ಕಾರಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದರು.ಸೋಮವಾರ ಮಡಿಕೇರಿಯಿಂದ ಬೆಂಗಳೂರಿಗೆ ಪತ್ನಿ ಜೊತೆಗೆ ಸರ್ಕಾರಿ ಬಸ್ ನಲ್ಲಿ ಪಯಣಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಇಂಧನ ಮಿತವ್ಯಯಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಭಾರತವು ಇಂಧನಕ್ಕಾಗಿ ಪರ ರಾಷ್ಟ್ರಗಳ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಇಂಧನ ದರ ಹೆಚ್ಚಳ ಅನಿವಾರ್ಯ. ವಿದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂಧನ ದರ ಮಿತವಾಗಿದೆ. ಸಾರ್ವಜನಿಕರು ಕೂಡ ದೇಶದ ಹಿತದೃಷ್ಟಿಯಿಂದ ಇಂಧನ ಮಿತ ಬಳಕೆ ಮಾಡಬೇಕು ಎಂದು ಹೇಳಿದರು.