ಕನ್ನಡಪ್ರಭ ವಾರ್ತೆ ಮದ್ದೂರು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಗಳಿಸಿ ಸರ್ಕಾರ ರಚಿಸುವಲ್ಲಿ ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ ಎಂದು ಪಕ್ಷದ ಮೈಸೂರು ವಿಭಾಗದ ಉಸ್ತುವಾರಿ ಎನ್.ಮಹೇಶ್ ಭಾನುವಾರ ಹೇಳಿದರು.ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧ್ಯಕ್ಷರು ಮತ್ತು ಬಿಎಲ್ ಎಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಈಗಾಗಲೇ ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿದೆ. ವಿಪಕ್ಷಗಳು ಜನಸಾಮಾನ್ಯರಿಗೆ ತಪ್ಪ ಸಂದೇಶ ಸಾರುತ್ತಿವೆ. ಈ ಬಗ್ಗೆ ಪಕ್ಷದ ಪದಾಧಿಕಾರಿಗಳು ಸಾರ್ವಜನಿಕವಾಗಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.ಮದ್ದೂರು ಕ್ಷೇತ್ರದ ಕಾರ್ಯಕರ್ತರು ಎಲ್ಲಾ ಬೂತ್ ಗಳಲ್ಲಿ ಸಂಚಾರ ಮಾಡಿ ನೈಜ ಮತದಾರರು ಯಾರು ಅವರ ಹೆಸರು ಮತದಾರ ಪಟ್ಟಿಯಲ್ಲಿ ಇದೆಯೇ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಕ್ಷೇತ್ರದಲ್ಲಿ ಅನಧಿಕೃತ ಮತದಾರರನ್ನು ಪಟ್ಟಿಯಿಂದ ತೆಗೆಯುವ ಕೆಲಸ ಅನ್ನೋ ಕಾರ್ಯಕರ್ತರು ಮಾಡಬೇಕು. ಎಸ್ಐಆರ್ ಜಾರಿಯಾದರೆ ನೈಜ್ಯ ಮತದಾರರ ಪಟ್ಟಿಯಿಂದ ತೆಗೆಯಲು ಸಾಧ್ಯವಿಲ್ಲ. ಈ ಬಗ್ಗೆ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿ ಕೊಡಬೇಕು ಎಂದರು.
ರಾಜ್ಯದಲ್ಲಿ ಜೂನ್ 30ರಿಂದ ಎಸ್ಐಆರ್ ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಮತದಾರರಿಗೆ ಈ ಬಗ್ಗೆ ಸರಿಯಾದ ಮಾಹಿತಿ ನೀಡಿ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಉಳಿಸಬೇಕು ಎಂದರು.
ಈ ವೇಳೆ ರೈತ ಸಂಘದ ಮುಖಂಡ ಕೆ.ಎಸ್.ನಂಜುಂಡೇಗೌಡ, ಬಿಜೆಪಿ ಮುಖಂಡ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿದರು. ಬಿಜೆಪಿ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಹಾಗಲಹಳ್ಳಿ ರಘು, ಮದ್ದೂರು ಬಿಜೆಪಿ ಪಕ್ಷದ ಅಧ್ಯಕ್ಷ ಸಿ.ಕೆ.ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಅಶೋಕ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಜಿ.ಸಿ.ಮಧು ಮತ್ತು ಪಕ್ಷದ ಪದಾಧಿಕಾರಿಗಳು ಇದ್ದರು.
ಇದೇ ವೇಳೆ ಪಕ್ಷದ ಕಚೇರಿಯಲ್ಲಿ ನಡೆದ ಪ್ರಧಾನ ಮಂತ್ರಿಗಳ ಮನ್ ಕಿ ಬಾತ್ 135ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದನ್ನು ಕಾರ್ಯಕರ್ತರು ದೃಶ್ಯ ಮಾಧ್ಯಮಗಳಲ್ಲಿ ವೀಕ್ಷಣೆ ಮಾಡಿದರು.