ಕಂದಾಯ ಗ್ರಾಮ ಅಧಿಸೂಚನೆ: ಜೂ.30ರ ಗಡುವು

| Published : May 13 2025, 01:05 AM IST

ಸಾರಾಂಶ

ಮುಂಬರುವ ಜೂ.30ರೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಸಚಿವ ಕೃಷ್ಣಬೈರೇಗೌಡ ಸೂಚನೆ । ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ । ಭೂದಾಖಲೆಗಳ ಡಿಜಿಟಲೀಕರಣಕ್ಕೆ ನಿರ್ದೇಶನ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮುಂಬರುವ ಜೂ.30ರೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದರು.

ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ ಒಟ್ಟು 316 ಗ್ರಾಮಗಳ ಗುರುತಿಸಲಾಗಿದ್ದು, ಈಗಾಗಲೇ 296 ಪ್ರಾಥಮಿಕ ಸೂಚನೆ ಹಾಗೂ 206 ಅಂತಿಮ ಅಧಿಸೂಚನೆಯಾಗಿದೆ. ಇನ್ನೂ 61 ಗ್ರಾಮಗಳು ಅಂತಿಮ ಅಧಿಸೂಚನೆಗೆ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂ.30ರ ಗಡುವನ್ನು ನಿಗದಿಪಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಜನಗಣತಿ ಕಾರ್ಯದ ಪ್ರಕ್ರಿಯೆ ಆರಂಭವಾದರೆ, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು ಎರಡು ವರ್ಷ ಆಗಬಹುದು. ಹೀಗಾಗಿ ಬಾಕಿ ಇರುವ ಎಲ್ಲ ಕಂದಾಯ ಗ್ರಾಮಗಳ ರಚನೆ ಕಾರ್ಯ ಜೂ.30ರ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ತಾಕೀತು ಮಾಡಿದರು.

ಗ್ರಾಮದ 1 ಕಿಮೀ ವ್ಯಾಪ್ತಿ ಒಳಗೆ ಇದ್ದು, 10 ಮನೆಗಳಿಗಿಂತಲೂ ಹೆಚ್ಚು ಇದ್ದರೆ ಉಪ ಗ್ರಾಮ ರಚನೆ ಮಾಡಲು ಅವಕಾಶ ಇದೆ. ಜನರಿಗೆ ನಾವು ಸ್ಥಿರ ಬದುಕು ನೀಡಬೇಕು. ಬಿಟ್ಟು ಹೋಗಿರುವ ಕಂದಾಯ ಗ್ರಾಮಗಳ ರಚನೆ ಹಾಗೂ ಗುರುತಿಸುವ ಕಾರ್ಯ ಆಗಬೇಕು ಎಂದರು

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿಯೂ ಅನಧಿಕೃತವಾಗಿ ರಚನೆಯಾಗಿರುವ ಕಂದಾಯ ನಿವೇಶನ, ಕಟ್ಟಡಗಳಿಗೂ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಹತ್ತು ದಿನಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದರು.

ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ಹಕ್ಕುಪತ್ರ ಹಾಗೂ ಆಸ್ತಿ ನೊಂದಣಿಗೆ ಸಂಬಂಧಿಸಿದಂತೆ ಒಟ್ಟು 6393 ಕುಟುಂಬಗಳ ದಾಖಲೆಗಳಿಗೆ ಆಯಾ ತಹಸೀಲ್ದಾರರು ಅನುಮೋದನೆ ನೀಡಿದ್ದು, 4305 ಡೀಡ್‍ಗಳಿಗೆ ತಹಸೀಲ್ದಾರರು ಸಹಿ ಮಾಡಿರುತ್ತಾರೆ. ಈವರೆಗೆ 2888 ಫಲಾನುಭವಿಗಳಿಗೆ ಕಾವೇರಿ ತಂತ್ರಾಂಶದಲ್ಲಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಲಾಗಿದ್ದು, 2403 ಫಲಾನುಭವಿಗಳ ಇ-ಸ್ವತ್ತು ನೋಟಿಸ್ ಜನರೇಟ್ ಮಾಡಲಾಗಿದೆ ಎಂದರು.

ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ತ್ವರಿತಗತಿಯಲ್ಲಿ ಆಗಬೇಕು. ಈ ಯೋಜನೆಯಡಿ ಜಿಲ್ಲೆಯಲ್ಲಿ ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ ತಾಲೂಕುಗಳು ಉತ್ತಮ ಸಾಧನೆ ತೋರಿದ್ದು, ಉಳಿದ ಮೂರು ತಾಲೂಕುಗಳು ಸಹ ತ್ವರಿತಗತಿಯಲ್ಲಿ ಆಗಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ತಾಲೂಕುಗಳ ತಹಸೀಲ್ದಾರರು ಪಾಲ್ಗೊಂಡಿದ್ದರು.