ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುತ್ತಿರುವ ಪಡಿತರ ಅಕ್ಕಿ ವಿತರಣೆಯಲ್ಲಿ ಸರ್ವರ್ ಸಮಸ್ಯೆ ಉಂಟಾಗಿರುವುದರಿಂದ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ.
ಬಂಟ್ವಾಳ: ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುತ್ತಿರುವ ಪಡಿತರ ಅಕ್ಕಿ ವಿತರಣೆಯಲ್ಲಿ ಸರ್ವರ್ ಸಮಸ್ಯೆ ಉಂಟಾಗಿರುವುದರಿಂದ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ.
ಈ ಕುರಿತು ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಸರ್ವರ್ ತಾಂತ್ರಿಕ ಸಮಸ್ಯೆಯಿಂದಾಗಿ ಬಿಪಿಎಲ್ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ದಿನವಿಡೀ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ. ಹಲವೆಡೆ ಗ್ರಾಹಕರು ಗಂಟೆಗಟ್ಟಲೆ ಕಾದರೂ ಅಕ್ಕಿ ಪಡೆಯಲು ಸಾಧ್ಯವಾಗದೆ ಮನೆಗೆ ಹಿಂತಿರುಗುವಂತಾಗಿದೆ ಎಂದು ಅವರು ದೂರಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಎರಡು ತಿಂಗಳ ಪಡಿತರವನ್ನು ಒಂದೇ ತಿಂಗಳಲ್ಲಿ ವಿತರಿಸುತ್ತಿರುವ ಕಾರಣ ಸರ್ವರ್ ಮೇಲಿನ ಒತ್ತಡ ಹೆಚ್ಚಾಗಿ ಸಮಸ್ಯೆ ಉಂಟಾಗಿದೆ ಎಂದು ಮಾಹಿತಿ ನೀಡುತ್ತಿದ್ದಾರೆ. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವುದು ಅಗತ್ಯವಾಗಿದೆ ಎಂದು ಪ್ರಭಾಕರ ಪ್ರಭು ಅಭಿಪ್ರಾಯಪಟ್ಟಿದ್ದಾರೆ.ತಿಂಗಳ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರಿದರೆ ಅನೇಕ ಫಲಾನುಭವಿಗಳು ಮೇ ತಿಂಗಳ ಪಡಿತರ ಅಕ್ಕಿಯಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ, ಮೇ ತಿಂಗಳ ಪಡಿತರ ವಿತರಣೆಯನ್ನು ಜೂನ್ ಮೊದಲ ವಾರದವರೆಗೂ ವಿಸ್ತರಿಸುವಂತೆ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.