ವಸತಿ ಇಲಾಖೆ ಸುತ್ತೋಲೆ ಶೀಘ್ರ ಹಿಂಪಡೆಯಲು ಹಕ್ಕೊತ್ತಾಯ: ಜನಾಂದೋಲನದ ಆನಂದಪ್ಪ

| Published : Feb 21 2025, 11:45 PM IST

ವಸತಿ ಇಲಾಖೆ ಸುತ್ತೋಲೆ ಶೀಘ್ರ ಹಿಂಪಡೆಯಲು ಹಕ್ಕೊತ್ತಾಯ: ಜನಾಂದೋಲನದ ಆನಂದಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ವತಿಯಿಂದ ಫೆ.24ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಗೌರವಾಧ್ಯಕ್ಷ ಎಸ್.ಎಲ್.ಆನಂದಪ್ಪ ಹೇಳಿದರು.

ಫೆ.24ಕ್ಕೆ ಕೊಳಚೆ ನಿವಾಸಿಗಳಿಗಾಗಿ ಬೆಂಗಳೂರಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ದಾವಣಗೆರೆ

ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ವತಿಯಿಂದ ಫೆ.24ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಗೌರವಾಧ್ಯಕ್ಷ ಎಸ್.ಎಲ್.ಆನಂದಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯಿಂದ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಲಾಗುವುದು. ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಲಾಗುವುದು ಎಂದರು.

2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಲಾಗುವುದು. ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 5 ಸಾವಿರ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು ನಮ್ಮ ಹಕ್ಕೊತ್ತಾಯಗಳನ್ನು ವಸತಿ ಸಚಿವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ರಾಜ್ಯದ ನಗರ ಜನಸಂಖ್ಯೆಯಲ್ಲಿ ಶೇ.40 ರಷ್ಟು ಸ್ಲಂ ನಿವಾಸಿಗಳಾಗಿ ಪರಿಶಿಷ್ಟ ಜಾತಿ/ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಅಲೆಮಾರಿ ಸಮುದಾಯಗಳನ್ನು ಒಳಗೊಂಡ ನಗರವಂಚಿತ ಸಮುದಾಯಗಳು ಸಾಮಾಜಿಕ ಅಸಮಾನತೆ ಭಾಗವಾಗಿ ಬದುಕು ಕಟ್ಟಿಕೊಡುತ್ತಿವೆ. ಕೊಳಗೇರಿಗಳಲ್ಲಿರುವ ಜನರನ್ನು ನಾಗರೀಕರನ್ನಾಗಿ ಇಂದಿನ ಅಭಿವೃದ್ಧಿ ಗುರುತಿಸದೇ ತಾರತಮ್ಯ ಎಸಗಲಾಗುತ್ತಿದೆ. ಭೂಮಿ, ವಸತಿ ಮೂಲಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ ಬೀದಿದೀಪ ಶೌಚಾಲಯ ಜೀವನೋಪಾಯದಂತಹ ಕನಿಷ್ಠ ಸೌಲಭ್ಯಗಳನ್ನು ನೀಡಿಲ್ಲ. ಅಭಿವೃದ್ಧಿಯಿಂದ ನಮ್ಮನ್ನು ದೂರವಿಡುವ ಮೂಲಕ ಸಂವಿಧಾನದ ಖಾತ್ರಿಗಳನ್ನು ದೊರಕದಂತೆ ಮಾಡಲಾಗಿದೆ ಎಂದರು.

ಶಬ್ಬೀರ್ ಸಾಬ್, ಜಂಶಿದಾ ಬಾನು, ಬೀಬಿಜಾನ್, ಮಂಜುಳ, ಗೀತಮ್ಮ, ರೇಣುಕ ಎಲ್ಲಮ್ಮ ಇದ್ದರು.