ಸಾರಾಂಶ
ಹಾವೇರಿ: ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲು ನಾವೆಲ್ಲರೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ. ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ವರ್ತುಲ ರಸ್ತೆ ಹಾಗೂ ಕೆಐಎಡಿಬಿ ಕೈಗಾರಿಕಾ ನಿರ್ಮಾಣ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೊರತೆ ಕೆಲವು ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆಗೆ ಕ್ರಮ ವಹಿಸಲಾಗುವುದು ಎಂದರು. ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ವರ್ತುಲ ರಸ್ತೆ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು. ವರ್ತುಲ ರಸ್ತೆ ನಿರ್ಮಾಣಕ್ಕೆ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಂಡು ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಿ ಅದನ್ನು ಅನುಮೋದನೆ ಮಾಡಿಕೊಂಡು ಬರುತ್ತೇನೆ ಎಂದರು. ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪೂಜಾರ್ ವೀರಮಲ್ಲಪ್ಪ ಮಾಹಿತಿ ನೀಡಿ, ಹಾವೇರಿ ಪ್ರವೇಶದ್ವಾರದಿಂದ ಆರಂಭವಾಗಿ ದೇವಗಿರಿ ಯಲ್ಲಾಪುರ, ಮೆಡಿಕಲ್ ಕಾಲೇಜು, ರೈಲ್ವೆ ಕ್ರಾಸ್, ಗುತ್ತಲ ರಸ್ತೆ, ಹೊಸ ಹೈವೆ ಹೀಗೆ ಒಟ್ಟು 11.5 ಕಿಮೀ ವರೆಗೆ ವರ್ತುಲ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ. ಈಗಾಗಲೇ ಸರ್ವೇ ಕೆಲಸ ಆರಂಭಿಸಿದ್ದು, ಜೂ. 30ರ ಒಳಗಾಗಿ ಸರ್ವೇ ಕೆಲಸವನ್ನು ಪೂರ್ಣಗೊಳಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.ಗಣಜೂರು- ಕೋಳೂರ ರಸ್ತೆ ಕಾಮಗಾರಿಯು ನಿಧಾನಗತಿಯಾಗುತ್ತಿದೆ. ಸಾಕಷ್ಟ್ಟು ಅನುದಾನ ಲಭ್ಯವಿದ್ದರೂ ರಸ್ತೆ ಕಾಮಗಾರಿ ಮಾಡಲು ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಗಣಜೂರು- ಕೋಳೂರು ರಸ್ತೆಯನ್ನು ಸ್ವತಃ ನೋಡಿಕೊಂಡು ಬಂದಿದ್ದೇನೆ, ನನಗೆ ಅದು ತೃಪ್ತಿದಾಯವಾಗಿಲ್ಲ ಎಂದರು.
ಮೊದಲನೇ ಹಂತದ ಕಾಮಗಾರಿ ಪೂರ್ಣವಾಗಿಲ್ಲ. ಇನ್ನೂ ಎರಡನೇ ಹಂತದ ಕಾಮಗಾರಿ ಯಾವಾಗ ಆರಂಭಿಸುತ್ತಿರಿ. ಯಾವುದೇ ಕೆಲಸವಿದ್ದರೂ ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು. ಅನುದಾನವಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದೆ ಬೇಜವಾಬ್ದಾರಿ ತೋರಿಸುತ್ತಿದ್ದೀರಿ ಎಂದು ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ನಗರಸಭೆ ಸದಸ್ಯ ಸಂಜೀವಕುಮಾರ್ ನೀರಲಗಿ, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.