ಎಸ್. ಜಾನಕಿ ಅವರು ತಮ್ಮ ಸುಮಧುರ ಕಂಠದ ಮೂಲಕ ಭಾರತೀಯ ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾಗಿದೆ

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ನಡೆದ ಕಣಿಯನಹುಂಡಿ ಗ್ರಾಮದಲ್ಲಿ ಮಂಗಳವಾರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ನೆರವೇರಿತು.

ಬೆಳಗ್ಗೆ ಸಮಾಧಿ ಬಳಿ ಶಾಸ್ತ್ರೋಕ್ತ ಪೂಜೆ ಹಾಗೂ 11ನೇ ದಿನದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗ್ರಾಮಸ್ಥರು, ಬಂಧು-ಬಳಗ, ಸಂಗೀತಾಸಕ್ತರು ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ ಅಭಿಮಾನಿಗಳು ಸಮಾಧಿಗೆ ಪುಷ್ಪನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಗ್ರಾಮದ ಕೆ.ಎಚ್. ಬಸವರಾಜು ಮಾತನಾಡಿ, ಎಸ್. ಜಾನಕಿ ಅವರು ತಮ್ಮ ಸುಮಧುರ ಕಂಠದ ಮೂಲಕ ಭಾರತೀಯ ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾಗಿದೆ. ಅವರು ಹಾಡಿರುವ ಸಾವಿರಾರು ಗೀತೆಗಳು ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಲಿವೆ ಎಂದು ಸ್ಮರಿಸಿದರು.

ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಪ್ರಸಾದ ಸ್ವೀಕರಿಸಿ ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಗ್ರಾಮಸ್ಥರು ಹೊಂಬಾಳೆಯನ್ನು ಜಾನಕಿಯವರ ಚಿತೆ ಉರಿದ ಸ್ಥಳದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಹಾಲು ತುಪ್ಪವನ್ನೆರೆದರು‌. ಎಸ್. ಜಾನಕಿಯವರ ಸಾಕು ಪುತ್ರ ನವೀನ್ ಹಾಗೂ ಅವರ ಕುಟುಂಬದವರು 11ನೇ ದಿನದ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು.