ನರಸಿಂಹರಾಜಪುರಶಿವಮೊಗ್ಗ ವಿಮಾನ ನಿಲ್ದಾಣದಿಂದ ಕೊಪ್ಪದವರೆಗೆ ₹19 ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಮಾಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

- ಶೆಟ್ಟಿಕೊಪ್ಪದಲ್ಲಿ 46 ಲಕ್ಷ ರುಪಾಯಿ ವೆಚ್ಚದ ಕಡಹಿನಬೈಲು ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕೊಪ್ಪದವರೆಗೆ ₹19 ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಮಾಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಸೋಮವಾರ ಸಂಜೆ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ₹46 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಡಹಿನ ಬೈಲು ಗ್ರಾಪಂ ನೂತನ ಕಚೇರಿ ಕಟ್ಟಡ ಕಾಮಗಾರಿ ಹಾಗೂ ಶೆಟ್ಟಿಕೊಪ್ಪ ಕೆರೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶೆಟ್ಟಿಕೊಪ್ಪ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಸ್ತೆಯನ್ನು ₹1.50 ಕೋಟಿ ವೆಚ್ಚದಲ್ಲಿ ವಿಸ್ತರಣೆ ಮಾಡಿ ಎರಡು ಬದಿಯಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುವುದು. ಅಲ್ಲದೆ ರಸ್ತೆ ಬದಿ ಬರುವ ಕೆರೆಗೆ ತಡೆ ಗೋಡೆ ನಿರ್ಮಿಸಿ ಶೆಟ್ಟಿಕೊಪ್ಪವನ್ನು ಮಾದರಿ ಊರಾಗಿ ಅಭಿವೃದ್ಧಿ ಪಡಿಸಲು ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು ವಸ್ತಾರೆ ರಸ್ತೆ ಅಭಿವೃದ್ಧಿಗೆ ₹80 ಕೋಟಿ ಮಂಜೂರಾತಿ ಹಂತದಲ್ಲಿದೆ. ಜಯಪುರ–ಕೊಪ್ಪರಸ್ತೆಯನ್ನು ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅತಿಯಾದ ಮಳೆಯಿಂದ ರಸ್ತೆಗಳು ಗುಂಡಿ ಬಿದ್ದು ಶಿಥಿಲಾವಸ್ಥೆಗೆ ತಲುಪಿದ್ದು ಈಗಾಗಲೇ ಲೋಕೋಪಯೋಗಿ ಇಲಾಖೆ ರಸ್ತೆಯ ಗುಂಡಿಗಳನ್ನು ಮುಚ್ಚಲಾಗಿದೆ. ನರಸಿಂಹರಾಜಪುರ ಪಟ್ಟಣದ ಬಸ್ ನಿಲ್ದಾಣದಿಂದ ಪ್ರವಾಸಿಮಂದಿರ ಹಾಗೂ ಪಟ್ಟಣ ಪಂಚಾಯಿತಿಯಿಂದ ಸುಂಕದಕಟ್ಟೆವರೆಗೆ ರಸ್ತೆ ವಿಸ್ತರಣೆಗೆ ರಾಜ್ಯಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಅವರ ಪ್ರಯತ್ನದಿಂದ ₹60 ಕೋಟಿ ಮಂಜೂರಾಗಿದ್ದು ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು. ರಸ್ತೆ ವಿಸ್ತರಣೆಗೆ ಬೆರಳೆಣಿಕೆಯಷ್ಟು ಜನ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಊರಿನ ವ್ಯಾಪಾರ, ವ್ಯವಹಾರದ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ . ಹೊನ್ನೆ ಕೂಡಿಗೆಯಿಂದ– ನರಸಿಂಹರಾಜಪುರಕ್ಕೆ ಸಂಪರ್ಕ ಕಲ್ಪಿಸಲು ಭದ್ರಾಹಿನ್ನೀರಿಗೆ ₹35 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಅಲ್ಲದೆ ₹5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣವಾಗಿದೆ. ಶೀಘ್ರ ಇದರ ಉದ್ಘಾಟನೆ ನೆರವೇರಲಿದೆ. ನರಸಿಂಹರಾಜಪುರ ಪಟ್ಟಣದ ವ್ಯಾಪ್ತಿಯಲ್ಲಿ ತಾಲೂಕು ಕಚೇರಿ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಶಿವಮೊಗ್ಗ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟಿರುವ ಭರವಸೆ ಈಡೇರಿಸುವ ಮೂಲಕ ಬಡಜನರ ಮನೆಗೆ ಮುಟ್ಟುವಂತಹ ಕಾರ್ಯಕ್ರಮ ನೀಡಿ ಆತ್ಮ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡಿದೆ. ಕಡಹಿನಬೈಲು ಏತ ನೀರಾವರಿ ಯೋಜನೆ ನಿರ್ಮಾಣದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಎಂ. ಶ್ರೀನಿವಾಸ್ ಪಾತ್ರ ಪ್ರಮುಖವಾಗಿದೆ ಎಂದರು. ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಲಿಲ್ಲಿ ಮಾತುಕುಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನಿಲ್ ಕುಮಾರ್ ,ಕಡಹಿನಬೈಲು ಗ್ರಾಪಂ ಸದಸ್ಯ ಎ.ಬಿ.ಮಂಜುನಾಥ್, ಜಿಲ್ಲಾ ಎಸ್.ಸಿ, ಎಸ್.ಟಿ ದೌರ್ಜನ್ಯ ಸಮಿತಿ ಸದಸ್ಯ ಎಂ.ಮಹೇಶ್ ಮಾತನಾಡಿದರು.

ಸಭೆಯಲ್ಲಿ ಗ್ರಾಪಂ ಸದಸ್ಯರಾದ ಚಂದ್ರಶೇಖರ್, ಶೈಲಾಮಹೇಶ್, ರವೀಂದ್ರ, ವಾಣಿನರೇಂದ್ರ, ಪೂರ್ಣಿಮಾ,ಅಶ್ವಿನಿ, ಚೆರಿಯನ್, ಕೊಪ್ಪ ಎ.ಪಿ.ಎಂ.ಸಿ ಅಧ್ಯಕ್ಷ ಎಸ್.ಡಿ.ರಾಜೇಂದ್ರ, ಕೆಡಿಪಿ ಸದಸ್ಯರಾದ ಮಾಳೂರುದಿಣ್ಣೆ ರಮೇಶ್,ಕೆ.ವಿ. ಸಾಜು,ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಇಓ ಎಚ್.ಡಿ.ನವೀನ್ ಕುಮಾರ್,ಬಿಇಓ ಶಬಾನ ಅಂಜುಮ್,ಪಿಸಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಕೆ.ಎಂ.ಸುಂದರೇಶ್, ನಿರ್ದೇಶಕಿ ಶೈಲಾ ಮಹೇಶ್, ಗ್ಯಾರಂಟಿ ಸಮಿತಿ ಸದಸ್ಯ ಬೇಸಿಲ್ , ಜಿಪಂ ಮಾಜಿ ಸದಸ್ಯ ಪಿ.ಆರ್.ಸದಾಶಿವ, ವೆಂಕಟೇಶ್ವರ ಕೆರೆಬಳಕೆದಾರರ ಸಂಘದ ಅಧ್ಯಕ್ಷ ಕಾಂತರಾಜ್, ಪಿಡಿಓ ವಿಂದ್ಯಾ ಮತ್ತಿತರರು ಇದ್ದರು.