ಸಾರಾಂಶ
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ದೊರೆಯಿತು. ಜಾಥಾಗೆ ಹಸಿರು ನಿಶಾನೆ ತೋರಿ ಬಳಿಕ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಅವರು, ಜನಸಾಮಾನ್ಯರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸಲು ಪ್ರತಿವರ್ಷದಂತೆ ಈ ಬಾರಿಯೂ ರಸ್ತೆ ಸುರಕ್ಷತಾ ಸಪ್ತಾಹ ಆಯೋಜಿಸಲಾಗಿದೆ. ದಿನೆದಿನೇ ಹೆಚ್ಚಾಗುತ್ತಿರುವ ಅಪಘಾತ ಪ್ರಮಾಣವನ್ನು ತಗ್ಗಿಸುವುದೇ ಸಪ್ತಾಹದ ಉದ್ದೇಶವಾಗಿದೆ. ರಸ್ತೆ ಸುರಕ್ಷತೆಯ ಬಗ್ಗೆ ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಅಗತ್ಯವಾಗಿದೆ ಎಂದರು.ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಕಳೆದ ಬಾರಿಗಿಂತ ಪ್ರಸ್ತುತ ಸಾಲಿನಲ್ಲಿ ಹೆಚ್ಚಾಗಿದೆ. ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜನರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಚಾ.ನಗರವನ್ನು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರು ಸಹಕರಿಸಬೇಕು ಎಂದು ತಿಳಿಸಿದರು.
ಪ್ರಾದೇಶಿಕ ಸಾರಿಗೆ ನಿರೀಕ್ಷಕ ದಿನೇಶ್ಕುಮಾರ್ ಮಾತನಾಡಿ, ಸಾರ್ವಜನಿಕರು, ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಮಹತ್ವ ಅರಿಯಬೇಕು. ಅಪಘಾತ ಪ್ರಮಾಣಗಳನ್ನು ಕಡಿಮೆ ಮಾಡಲು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ ಪಡೆದಿರಬೇಕು. ೧೮ ವರ್ಷ ಮೇಲ್ಪಟ್ಟವರು ಮಾತ್ರ ವಾಹನ ಚಾಲನೆ ಮಾಡಬೇಕು. ಅಪ್ರಾಪ್ತರು ವಾಹನ ಚಾಲಿಸಿದರೆ ಅವರ ಪೋಷಕರಿಗೆ ೨೫ ಸಾವಿರ ರು.ದಂಡ ವಿಧಿಸಲಾಗುವುದು. ಅಪಘಾತದಲ್ಲಿ ಸಿಲುಕಿದ ವ್ಯಕ್ತಿ ಮರಣ ಹೊಂದಿದರೆ ಅಪ್ತಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಲಾಗುವುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಯುವಕರು ಬೈಕ್ ವೀಲಿಂಗ್ ಮಾಡಬಾರದು. ಕುಡಿದು ವಾಹನ ಚಾಲಿಸಬಾರದು ಎಂದರು. ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಸಂಚಾರಿ ನಿರೀಕ್ಷಕ ಮಹದೇವಸ್ವಾಮಿ, ಇತರರು ಇದ್ದರು.