ತೈಲ ಬೆಲೆ ಏರಿಕೆ ವಿರೋಧಿಸಿ ರಸ್ತೆತಡೆ

| Published : Jun 21 2024, 01:03 AM IST

ಸಾರಾಂಶ

ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಕಾಂಗ್ರೆಸ್‌ನವರು ಸುಳ್ಳುಗಳ ಸರಮಾಲೆ ಕಟ್ಟಿ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ನಿಮ್ಮ ಆಟ ನಡೆಯುವುದಿಲ್ಲ, ಸತ್ಯ ಏನೆಂಬುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಸಂಪನ್ಮೂಲ, ಸಮೃದ್ಧತೆ ಹೊಂದಿರುವ ಮುಂಚೂಣಿ ರಾಜ್ಯಗಳಲ್ಲಿ ನಮ್ಮದು ಮುಂದಿದೆ, ಆಡಳಿತ ವೈಖರಿ ಇತಿಹಾಸದ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಲಿನ ದರ ಹೆಚ್ಚಳ, ಮೋಟಾರ್ ವಾಹನ ತೆರಿಗೆ ದರ ಹೆಚ್ಚಳ, ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಏರಿಕೆ ನಿರ್ಧಾರದಿಂದ ಹಿಂದೆ ಸರಿಯುವ ತನಕ ಪ್ರತಿಭಟನೆ ನಿರಂತರವಾಗಿರುತ್ತದೆ. ಯಡಿಯೂರಪ್ಪ, ಬೊವ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪೆಟ್ರೋಲ್, ಡೀಸೆಲ್‌ಗೆ ೭ರು. ತೆರಿಗೆ ಕಡಿಮೆ ಮಾಡಿದ್ದರು. ಬಿಜೆಪಿ ಸರ್ಕಾರ ಇರುವ ಅರುಣಾಚಲ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಇಲ್ಲಿಗಿಂತ ೧೦ ರು. ಕಡಿಮೆ ಇದೆ. ಇಂಧನ ದರ ಏರಿಕೆಯಾದರೆ ಅದರ ನೇರ ಹೊಡೆತ ಬಡವರ ಮೇಲೆ ಬೀಳುತ್ತದೆ. ಹಾಗಾಗಿ ಸರ್ಕಾರ ತಕ್ಷಣ ಬೆಲೆ ಏರಿಕೆ ಮಾಡಿರುವ ದರವನ್ನು ಇಳಿಸಬೇಕು ಎಂದು ಒತ್ತಾಯಿಸಿದರು.ಬೆಲೆ ಏರಿಕೆಯಿಂದ ರಾಜ್ಯದ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಜನರ ಕಿಸೆಯನ್ನು ಬರಿದು ಮಾಡದೆ ಆಡಳಿತ ನಡೆಸುವ ಮಾರ್ಗವಿದ್ದರೆ ಮುನ್ನಡೆಯಿರಿ. ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸುವ ಸರಮಾಲೆ ಹೆಣೆಯುವ ವಸೂಲಿ ಯೋಜನೆಗಳಿದ್ದರೆ ಈ ಕೂಡಲೇ ರಾಜೀನಾಮೆ ಕೊಟ್ಟು ಪ್ರಜೆಗಳನ್ನು ಉಳಿಸಿ ಎಂದು ಆಗ್ರಹಿಸಿದರು.ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕೇವಲ ೧ ರು. ಹೆಚ್ಚಳ ಮಾಡಿದ್ದಕ್ಕೆ ಪ್ರತಿಭಟಿಸಿ, ತೈಲ ಬೆಲೆ ಹೆಚ್ಚಳದಿಂದಾಗಿ ಅಗತ್ಯ ಬೆಲೆಗಳು ದುಬಾರಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ತಕ್ಷಣ ಬೆಲೆ ಹೆಚ್ಚಿಸಿರುವುದನ್ನು ವಾಪಸ್ಸು ಪಡೆಯುವಂತೆ ಒತ್ತಾಯಿಸಿದ್ದರು. ಈಗ ತಾವೇ ಮುಖ್ಯಮಂತ್ರಿಯಾಗಿ ತೈಲ ಬೆಲೆ ಹೆಚ್ಚಳ ಮಾಡಿ ಬೇರೆ ರಾಜ್ಯಗಳಿಗಿಂತ ಕಡಿಮೆ ದರ ಇದೆ. ನಾವು ತೆರಿಗೆ ಸಂಗ್ರಹಿಸಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಹೇಳಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು. ಪೆಟ್ರೋಲ್-ಡೀಸೆಲ್ ತೆರಿಗೆ ಹೆಚ್ಚಿಸಿರುವುದನ್ನ ತಕ್ಷಣ ವಾಪಸ್ಸು ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ನಿರಂತರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖಂಡರಾದ ಡಾ.ಸಿದ್ದರಾಮಯ್ಯ, ವಸಂತ್‌ಕುಮಾರ್, ಸಿ.ಟಿ.ಮಂಜುನಾಥ್, ಶಿವಕುಮಾರ ಆರಾಧ್ಯ, ವಿವೇಕ್, ಹೊಸಹಳ್ಳಿ ಶಿವು, ಚಾಮರಾಜು, ಸಿದ್ದರಾಜುಗೌಡ, ಭೀಮೇಶ್, ಶಂಕರ್, ಚಂದ್ರು, ಕೃಷ್ಣ, ವಸಂತ್, ಭಾಗವಹಿಸಿದ್ದರು.