ಸಾರಾಂಶ
ಬಿಬಿಎಂಪಿಯು ತೆರಿಗೆ ಕಟ್ಟದ ರಾಕ್ಲೈನ್ ಮಾಲ್ಗೆ ಹಾಕಿರುವ ಬೀಗ ತೆರವು ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ತೆರಿಗೆ ಸಂಗ್ರಹಕ್ಕೆ ಪರ್ಯಾಯ ದಾರಿ ಹುಡುಕಿಕೊಳ್ಳುವಂತೆ ಸೂಚಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ರಾಕ್ಲೈನ್ ಮಾಲ್ಗೆ ಹಾಕಲಾಗಿರುವ ಬೀಗವನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ಸೋಮವಾರ ಸೂಚಿಸಿದೆ.ಬಿಬಿಎಂಪಿ ಕ್ರಮ ಪ್ರಶ್ನಿಸಿ ರಾಕ್ಲೈನ್ ವೆಂಕಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ರಾಕ್ಲೈನ್ ವೆಂಕಟೇಶ್ ಪರ ವಕೀಲರು, ಮಾಲ್ಗೆ ಬೀಗ ಹಾಕಲು ಬಿಬಿಎಂಪಿಗೆ ಕೆಎಂಸಿ ಸೇರಿದಂತೆ ಯಾವುದೇ ಕಾಯ್ದೆಯಲ್ಲಿ ಅವಕಾಶ ಇಲ್ಲ. ತೆರಿಗೆ ಸಂಗ್ರಹಿಸಲು ಬಿಬಿಎಂಪಿಗೆ ಪರ್ಯಾಯ ಮಾರ್ಗಗಳಿವೆ. ಆದರೂ ಬೀಗ ಹಾಕಿದ್ದು, ಮಾಲ್ ದಿನನಿತ್ಯದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಲಿದೆ. ಆದ್ದರಿಂದ ಮಾಲ್ ಬೀಗ ತೆರೆಯಲು ಬಿಬಿಎಂಪಿಗೆ ಆದೇಶಿಸಬೇಕು ಎಂದು ಕೋರಿದರು.ಈ ಮನವಿ ಪುರಸ್ಕರಿಸಿದ ನ್ಯಾಯಪೀಠ, ತಕ್ಷಣವೇ ಮಾಲ್ಗೆ ಹಾಕಿರುವ ಬೀಗ ತೆಗೆಯಬೇಕು. ಪ್ರಕರಣವನ್ನು ಬಗೆಹರಿಸಿಕೊಳ್ಳಲು ಪರ್ಯಾಯ ಮಾರ್ಗ ಹುಡುಕುವಂತೆ ಬಿಬಿಎಂಪಿಗೆ ಸೂಚಿಸಿತು.