ಹುಬ್ಬಳ್ಳಿ:
ಭವಿಷ್ಯದ ಭಾರತದಲ್ಲಿ ಯುವಜನರಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳು ದೊರೆಯಬೇಕಾದರೆ ಕೇಂದ್ರ ಸರ್ಕಾರದ ಕಾರ್ಪೊರೇಟ್ ಹಾಗೂ ಕೋಮುವಾದಿ ನೀತಿಗಳನ್ನು ಹಿಮ್ಮೆಟ್ಟಿಸಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ ಆಗ್ರಹಿಸಿದರು.ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಹಾಗೂ ಜನಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಅಂಬೇಡ್ಕರ್ ವೃತ್ತದ ಅಂಚೆ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.84 ವರ್ಷಗಳ ಹಿಂದೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡಿ ದೇಶದಿಂದ ಅವರನ್ನು ಹೊರದಬ್ಬಲಾಯಿತು. ಆದರೆ, ಇಂದು ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ನೀಡಿ ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಖಾಸಗೀಕರಣ ಗೊಳಿಸಲಾಗುತ್ತಿದೆ. ಇದರಿಂದ ನಿರುದ್ಯೋಗ ಹಾಗೂ ಜನಸಾಮಾನ್ಯರ ಸಂಕಷ್ಟ ಹೆಚ್ಚುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಮೇ 22ರಂದು ಪರಿಷ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವ ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಬಲವಂತದ ಭೂಸ್ವಾಧೀನ ಹಾಗೂ ಕಾರ್ಪೊರೇಟ್ ಭೂ ಕಬಳಿಕೆ ತಡೆಯಬೇಕು ಎಂದು ಒತ್ತಾಯಿಸಿದರು.ಮಹದಾಯಿ, ಕಳಸಾ-ಬಂಡೂರಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಮಲಪ್ರಭೆಗೆ ನೀರು ಹರಿಸಬೇಕು. ಬರಪೀಡಿತ ಪ್ರದೇಶಗಳಿಗೆ ಪರಿಹಾರ, ಬೆಲೆ ಏರಿಕೆ ನಿಯಂತ್ರಣ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ನಂತರ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಹೇಶ ಪತ್ತಾರ, ಬಸೀರ ಮುಧೋಳ, ಬಿ.ಐ. ಈಳೀಗೇರ, ಚನ್ನಮ್ಮ ಡೊಳ್ಳಿನ, ಸುನಂದಾ ಚಿಗರಿ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.