ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ವಾಹನ ತೊಳೆಯಲು, ಈಜು ಕೊಳಗಳಲ್ಲಿ ಕುಡಿಯುವ ನೀರು ಬಳಸುವುದನ್ನು ಬೆಂಗಳೂರು ಜಲಮಂಡಳಿ ನಿಷೇಧಿಸಿದ್ದು, ಆದೇಶ ಉಲ್ಲಂಘಿಸಿದವರಿಗೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

ಮನೆಗಳು, ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಕಟ್ಟಡಗಳು, ಸರ್ಕಾರಿ ಕಚೇರಿಗಳು, ಹೋಟೆಲ್‌ಗಳು, ಕೈಗಾರಿಕೆಗಳು ಸೇರಿದಂತೆ ಎಲ್ಲ ಕಟ್ಟಡಗಳಲ್ಲಿ ವಾಟರ್ ಫ್ಲೋ ರೆಸ್ಟ್ರಿಕ್ಟರ್, ಏರೇಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಏರೇಟರ್ ಅಳವಡಿಕೆಯಿಂದ ನೀರಿನ ಬಳಕೆಯನ್ನು ಶೇ.30 ರಿಂದ 50ರವರೆಗೆ ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದೆ.

ಇನ್ನು ವಾಹನ ತೊಳೆಯುವುದು, ಉದ್ಯಾನಗಳಿಗೆ ನೀರು ಹಾಯಿಸುವುದು, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಇನ್ನಿತರ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಇದಕ್ಕೆ ಕಡ್ಡಾಯವಾಗಿ ಸಂಸ್ಕರಿತ ನೀರನ್ನೇ ಬಳಸಬೇಕು ಎಂದು ಡಾ. ಮಂಜುಳ ತಿಳಿಸಿದ್ದಾರೆ.

ಈಜುಕೊಳಗಳಿಗೆ ಕುಡಿಯುವ ನೀರು ಬಳುವಂತಿಲ್ಲ


ನಗರದಲ್ಲಿನ ಖಾಸಗಿ ಹಾಗೂ ಸಾರ್ವಜನಿಕ ಈಜುಕೊಳಗಳಲ್ಲಿ ಕುಡಿಯುವ ನೀರು ಬಳಸುವಂತಿಲ್ಲ. ಸಂಸ್ಕರಿತ ನೀರು ಅಥವಾ ಇತರೆ ಪರ್ಯಾಯ ಮೂಲಗಳಿಂದಲೇ ಬಳಸಬೇಕು. ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಜಲಮಂಡಳಿ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಶೇ.50 ರವರೆಗೆ ಕಡಿತಗೊಳಿಸಿ 5,000 ರು. ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದಲ್ಲಿ ಪ್ರತಿದಿನ 500 ರು.ಹೆಚ್ಚುವರಿ ದಂಡ ವಿಧಿಸುವುದರ ಜೊತೆಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಮಂಡಳಿ ಎಚ್ಚರಿಸಿದೆ.