ಸಾರಾಂಶ
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೆ 2.57 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಸಂಚರಿಸಿದ್ದು, 90.10 ಕೋಟಿ ರು.ಗಳಷ್ಟು ಲಾಭ ಪಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೆ 2.57 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಸಂಚರಿಸಿದ್ದು, 90.10 ಕೋಟಿ ರು.ಗಳಷ್ಟು ಲಾಭ ಪಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದ್ದಾರೆ.ಶುಕ್ರವಾರ ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೆ 2.57 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಸಂಚರಿಸಿದ್ದು, 90.10 ಕೋಟಿ ರು.ಗಳಷ್ಟು ಲಾಭ ಪಡೆದಿದ್ದಾರೆ. ಅದೇ ರೀತಿ ಗೃಹಜ್ಯೋತಿ ಯೋಜನೆಯಡಿ 2.81 ಲಕ್ಷ ವಿದ್ಯುತ್ ಗ್ರಾಹಕರಿಗೆ 438.14 ಕೋಟಿ ರು. ಉಚಿತ ವಿದ್ಯುತ್ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಬ್ಯಾಂಕ್ ಖಾತೆ ಮೂಲಕ ಮೂಲಕ 1,98,825 ಫಲಾನುಭವಿಗಳಿಗೆ 225.65 ಲಕ್ಷ ರು. ಗಳನ್ನು ಭರಿಸಲಾಗಿದೆ, ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 3762 ಅಭ್ಯರ್ಥಿಗಳು ನೋಂದಣಿಯಾಗಿದ್ದು, 5.82 ಕೋಟಿ ರು.ಗೂ ಹೆಚ್ಚು ಹಣ ಪಾವತಿಸಲಾಗಿದೆ ಎಂದರು.ಅರ್ಜಿ ಸಲ್ಲಿಸಿರುವ ಕೆಲವು ಅರ್ಹರಿಗೆ ಸಣ್ಣಪುಟ್ಟ ಸಮಸ್ಯೆಗಳಿಂದ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಇಂತಹ ಅರ್ಜಿಗಳನ್ನು ಆದ್ಯತೆಯ ಮೇಲೆ ನೊಂದಣಿ ಮಾಡಿ ಯೋಜನೆಯ ಲಾಭ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಈ ಯೋಜನೆಯ ಬಗ್ಗೆ ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾಲೇಜುಗಳಲ್ಲಿ ಹಮ್ಮಿಕೊಳ್ಳಬೇಕು ಎಂದರು.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾ.ರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಐದು ಗ್ಯಾರಂಟಿ ಯೊಜನೆಗಳಿಗೆ ಶೇ. 95 ಕ್ಕಿಂತಲೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ ಎಂದರು.ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಂತರ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ಗಳ ಓಡಾಟ ನಿಂತಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಶಕ್ತಿ ಯೋಜನೆ ಲಾಭ ಸಿಗುತ್ತಿಲ್ಲ. ಆದ್ದರಿಂದ ಆದ್ಯತೆಯ ಮೇಲೆ ಈ ಬಸ್ಗಳ ಪುನರ್ ಸಂಚಾರವಾಗಬೇಕು ಎಂದು ತಿಳಿಸಿದರು.
ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿ ಮನೆಯ ಯಜಮಾನಿ ಮರಣ ಹೊಂದಿದ್ದಲ್ಲಿ ಅವರ ಉತ್ತರದಾಯಿ ಯಜಮಾನಿಯ ಹೆಸರು ತಿದ್ದುಪಡಿಗೆ ಅವಕಾಶ ನೀಡಬೇಕು ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ ಉಪ್ಪುಂದ, ಶಂಕರ್ ಶೇರಿಗಾರ್, ಹರಿಪ್ರಸಾದ್ ಶೆಟ್ಟಿ ಹಾಗೂ ನವೀನ್ಚಂದ್ರ ಎಸ್ ಸುವರ್ಣ, ಸಮಿತಿಯ ಸದಸ್ಯರು, ಅನುಷ್ಠಾನಾಧಿಕಾರಿಗಳು ಇದ್ದರು.