ಹರಪನಹಳ್ಳಿ: ತಾಲೂಕಿನ ಚಿಗಟೇರಿ ಹೋಬಳಿಯ ಮೈದೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ₹18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.ತಾಲೂಕಿನ ಮೈದೂರು ಗ್ರಾಮದಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುಮೋದನೆಗೊಂಡ ₹18.90 ಕೋಟಿ ವೆಚ್ಚದಲ್ಲಿ ಬಾವಿಹಳ್ಳಿ ಗ್ರಾಮದಿಂದ (ರಾಜ್ಯ ಹೆದ್ದಾರಿ-236) ಮತ್ತಿಹಳ್ಳಿ ಕ್ರಾಸ್ (ರಾಜ್ಯ ಹೆದ್ದಾರಿ-2) ಸೇರುವ ಜಿಲ್ಲಾ ಮುಖ್ಯ ರಸ್ತೆ ಹಾಗೂ ಮೈದೂರು ಗ್ರಾಮದಿಂದ ಕೆಸರಹಳ್ಳಿ ಗ್ರಾಮದವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಿಗಟೇರಿ ಭಾಗದ ರೈತಾಪಿ ವರ್ಗಕ್ಕೆ ಅನುಕೂಲವಾಗುವಂತೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರು ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡಬೇಕು, ಒತ್ತುವರಿ ಮಾಡಿಕೊಂಡ ಸರ್ಕಾರಿ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ನಾವೇ ತೆರವುಗೊಳಿಸಬೇಕಾಗುತ್ತದೆ ಎಂದು ಹೇಳಿದರು.

ಹೆಚ್ಚು ಕೆಲಸ ಮಾಡುವವರಿಗೆ ಅಡ್ಡಗಾಲು ಬರುವುದು ಸಹಜ ಅದು ಬರದಂತೆ ನಾವೆಲ್ಲರೂ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮೈದೂರು ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಪಶು ಆಸ್ಪತ್ರೆ ಮಂಜೂರಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ರಾಜಕಾರಣಿಗಳಲ್ಲಿ ಅಭಿವೃದ್ಧಿ ಬಗ್ಗೆ ಇಚ್ಛಾಶಕ್ತಿ ಇದ್ದಾಗ ಮಾತ್ರ ಇಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ನಮ್ಮ ಶಾಸಕರು ಸದಾ ಅಭಿವೃದ್ಧಿಪರ ಚಿಂತನೆ ಹೊಂದಿದ್ದು, ಕ್ಷೇತ್ರದ ಜನರ ಅನುಕೂಲಕ್ಕೆ ತಕ್ಕಂತೆ ರಸ್ತೆ, ಚರಂಡಿ, ಆರೋಗ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು.


ಕಳೆದ ಬಾರಿಯ ಶಾಸಕರು ಮಾಡದ ಅಭಿವೃದ್ಧಿ ಕೆಲಸಗಳನ್ನು ನಮ್ಮ ಶಾಸಕರು ಮಾಡಿ ತೋರಿಸಿದ್ದಾರೆ. ಚಿಗಟೇರಿ ಭಾಗ ಹೆಚ್ಚು ಅಭಿವೃದ್ಧಿ ಹೊಂದುತ್ತಿದೆ. ದಿ.ಎಂ.ಪಿ.ಪ್ರಕಾಶ ಅವರು ಈ ಭಾಗದ ಜನರ ಮೇಲೆ ಹೆಚ್ಚು ನಂಬಿಕೆ ಹೊಂದಿದ್ದರು. ಜನರು ಸಹ ಅವರ ಜೊತೆ ಉತ್ತಮ ಒಡನಾಟ ಹೊಂದಿದ್ದರು ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ಮಾತನಾಡಿ, ಮೈದೂರು ಸೇರಿ ತಾಲೂಕಿಗೆ ಒಟ್ಟು ಮೂರು ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾಗಿದ್ದು, ಇದರಲ್ಲಿ ಶಾಸಕರ ಪಾತ್ರ ಬಹುಮುಖ್ಯವಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ, ನಗರಸಭೆ ಮಾಜಿ ಸದಸ್ಯ ಅಬ್ದುಲ್ ರೆಹಮಾನ್ ಮಾತನಾಡಿದರು.

ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಮೈದೂರು ರಾಮಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಲಾಟಿ ದಾದಪೀರ, ಗ್ರಾಪಂ ಮಾಜಿ ಅಧ್ಯಕ್ಷೆ ಸರಸ್ವತಿ, ತಾ.ಪಂ ಇಒ ಚಂದ್ರಶೇಖರ, ಎಇಇ ರಾಘವೇಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಅಶೋಕ, ಪಿ.ರಾಮಪ್ಪ, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ದೇವೇಂದ್ರಗೌಡ, ಭಾಗ್ಯಮ್ಮ, ದುರುಗಪ್ಪ, ವಿ.ಹನುಮಂತಪ್ಪ, ಎಂ.ನಾಗರಾಜ, ಓಮನಗೌಡ, ಯೋಗೇಶಗೌಡ, ಹೇಮಂತಪ್ಪ, ರಾಮನಗೌಡ, ವಿಜಯಕುಮಾರ, ಬಸವರಾಜಪ್ಪ, ಟಿಪಿಒ ಷಣ್ಮುಖಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜ, ವೈದ್ಯ ಶಿವಕುಮಾರ್, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ, ಪ್ರಸಾದ ಕವಾಡಿ, ಶಿವರಾಜ ಸೇರಿದಂತೆ ಇತರರು ಇದ್ದರು.