ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ. ಶಿವಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ. ಶಿವಪ್ಪ ಹೇಳಿದರು.ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಏರ್ಪಡಿಸಿದ 112ನೇ ಪರಿಷತ್ ಸಂಸ್ಥಾಪನ ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಎಂದೊಡನೆ ಕನ್ನಡಿಗರಲ್ಲಿ ರೋಮಾಂಚನವಾಗುತ್ತದೆ. ಯಾವ ಉದ್ದೇಶದಿಂದ 112 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಅವರ ಚಿಂತನೆಯಿಂದ ಕನ್ನಡ ಸಾಹಿತ್ಯ ಪರಿಷತ್ ಪ್ರಾರಂಭವಾಯಿತೋ ಆ ಉದ್ದೇಶ ಸಫಲವಾಗಿದೆ. ಕನ್ನಡ ನಾಡು-ನುಡಿ, ಆಚಾರ-ವಿಚಾರ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದರು.
ಯುವ ಜನರು ಹೆಚ್ಚು ಹೆಚ್ಚು ಸಾಹಿತ್ಯಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು. ಎಲ್ಲಿ ಹೆಚ್ಚು ಯುವಜನರು ತೊಡಗಿಸಿಕೊಳ್ಳುತ್ತಾರೋ ಆ ವಲಯ ಬೆಳೆಯುತ್ತಾ ಹೋಗುತ್ತದೆ. ಯುವಜನರನ್ನು ಸಾಹಿತ್ಯದೊಳಗೆ ಕರೆದಿರುವ ಕೆಲಸ ಆಗಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಒಂದು ಸಂಸ್ಥೆ 112 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದಿಗೂ ತನ್ನ ಅಸ್ಮಿತೆ ಉಳಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರು ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹಾಕಿಕೊಟ್ಟ ಅಡಿಪಾಯ ಕನ್ನಡ ನಾಡು ನುಡಿ ರಕ್ಷಣೆಗಾಗಿ ರಾಜ್ಯಾದ್ಯಂತ ತಾಲೂಕು ಜಿಲ್ಲಾ ಹೋಬಳಿ ಅಖಿಲ ಭಾರತ ಮಟ್ಟದ ಸಮ್ಮೇಳನಗಳನ್ನು ನಡೆಸುತ್ತಾ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿ ಸರಕಾರದೊಂದಿಗೆ ಗುರುತಿಸಿಕೊಂಡು ಕೆಲಸ ಮಾಡುತಿದೆ ಎಂದರು.ಕನ್ನಡ ನಾಡಿನ ಸೇವೆಗಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಆರು ಜನ ಹಿರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ವಿರಾಜಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮುಲ್ಲೆಂಗಡ ಮಧೋಶ್ ಪೂವಯ್ಯ, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಸಾಹಿತಿ ಮತ್ತು ಕವಿ ವೈದ್ಯ ಮೇಚಿರ ಸುಭಾಷ್ ನಾಣ್ಯಯ್ಯ ಅವರನ್ನು, ಕೊಡಗು ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯರು, ಸಾಂದೀಪನಿ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವಿಶೇಷ ಅಹ್ವಾನಿತರು ಆದ ಎಂ.ಟಿ. ದಾಮೋದರ್ ಅವರನ್ನು ಬಾಳೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಜಿಲ್ಲೆಯ ಹಿರಿಯ ಪತ್ರಕರ್ತರು, ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕಿನ ಮಾಜಿ ಅಧ್ಯಕ್ಷರು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಡಾ. ಕೆ. ಜೆ. ಸೋಮಣ್ಣ ಅವರನ್ನು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕನ್ನಡ ಕಟ್ಟುವಲ್ಲಿ ಸೇವೆ ಸಲ್ಲಿಸಿದ ಕೆ.ಜಿ. ದಿವಾಕರ್ ಅವರನ್ನು, ಕೃಷಿಕರು, ಕಲಾವಿದರು ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕಿನ ನಿರ್ದೇಶಕರಾದ ಎಂ.ಎನ್. ಕಾಳಪ್ಪ ಅವರನ್ನು ಅವರ ಕನ್ನಡ ಸೇವೆಗಾಗಿ ಗುರುತಿಸಿ ಸನ್ಮಾನಿಸಲಾಯಿತು.
ಕನ್ನಡ ಸೇವೆ ಎಲ್ಲಿ ಗುರುತಿಸಿಕೊಂಡಿರುವ ಸಾಧಕರನ್ನು ಗ್ರಾಹಕ ನ್ಯಾಯಾಲಯದ ಮಾಜಿ ಅಧ್ಯಕ್ಷರು ಪ್ರಸ್ತುತ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಆದ ಈ ಲೋಕೇಶ್ ಕುಮಾರ್ ಸನ್ಮಾನಿಸಿದರು.17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್ಐ ಮುನೀರ್ ಅಹ್ಮದ್, ಪಿ. ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಸುಂಟಿಕೊಪ್ಪ ಹೋಬಳಿ ಅಧ್ಯಕ್ಷರಾದ ಪಿ.ಎಫ್. ಸಭಾಸ್ಟಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಂ. ವಾಸು ರೈ, ಕೆ.ಎನ್. ದೇವರಾಜ್, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಎ.ವಿ. ಮಂಜುನಾಥ್, ಜಲಜಾ ಶೇಖರ್, ಕುಶಾಲನಗರ ತಾಲೂಕು ಗೌರವಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೇಶಕ ಟಿ.ಜಿ. ಪ್ರೇಮ್ ಕುಮಾರ್, ಮಡಿಕೇರಿ ತಾಲೂಕು ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ ಸೋಮವಾರಪೇಟೆ ತಾಲೂಕು ಗೌರವ ಕಾರ್ಯದರ್ಶಿ ಎ.ಪಿ ವೀರರಾಜು, ನಿರ್ದೇಶಕ ಜೋಕಿಂವಾಸ್, ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯು, ಮಡಿಕೇರಿ ತಾಲೂಕು ಗೌರವ ಕಾರ್ಯದರ್ಶಿ ಲಕ್ಷ್ಮಣ್, ಸದಸ್ಯರಾದ ಹರೀಶ್ ಸರಳಾಯ, ಎಚ್.ಎಲ್. ದಿವಾಕರ್, ಮನು ಅಚ್ಚಮ್ಮಯ್ಯ, ಅಜಯ್ ಮತ್ತು ಪರಿಷತ್ತಿನ ಸಿಬ್ಬಂದಿ ರೇಣುಕಾ, ವಿಜಯ ವಿಷ್ಣು ಭಟ್, ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರತಿಮಾ ಹರೀಶ್ ರೈ, ಸಾಹಿತಿಗಳಾದ ಗೌರಮ್ಮ ಮಾದಮಯ್ಯ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಸದಸ್ಯರಿಂದ ನಾಡಗೀತೆ, ಗೌರವ ಕಾರ್ಯದರ್ಶಿ ಎಸ್ಐ ಮುನೀರ್ ಅಹಮದ್ ನಿರೂಪಿಸಿದರು. ರೇವತಿ ರಮೇಶ್ ಸ್ವಾಗತಿಸಿದರು. ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ವಂದಿಸಿದರು.