ವೇತನ‌ ಕಡಿತ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

| Published : Feb 06 2024, 01:34 AM IST

ಸಾರಾಂಶ

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ವೇತನ ಕಡಿತ ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಆಗ್ರಹ

ಕನ್ನಡಪ್ರಭ ವಾರ್ತೆ ಚಾಮರಾಜನಗರ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ವೇತನ ಕಡಿತ ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಅಧ್ಯಕ್ಷೆ ಎ.ನಾಗಮಣಿ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಭಿತ್ರಪತ್ರ ಸುಡಲು ಮುಂದಾದಾಗ ಪೋಲಿಸರು, ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ಉಂಟಾಗಿ ಮಾತಿನ ಚಕಮಕಿ ನಡೆಯಿತು. ಭಿತ್ತಪತ್ರ ಸುಡುವ ಯತ್ನವನ್ನು ಪೋಲಿಸರು ವಿಫಲಗೊಳಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಅಧ್ಯಕ್ಷೆ ನಾಗಮಣಿ ಮಾತನಾಡಿ, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಅಂಗನವಾಡಿ ನೌಕರಿಗೆ ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೇ ನೀಡುತ್ತಿರುವ ವೇತನವನ್ನು ಕಡಿತಗೊಳಿಸಿದೆ. ಬಡವರ ವಿರೋಧಿ ಸರ್ಕಾರವಾಗಿದೆ. ಅಗತ್ಯವಸ್ತುಗಳ ಬೆಲೆ ಏರಿಕೆ, ದುಡಿಯುವ ಜನರ ಶೋಷಣೆ, ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಇವೆಲ್ಲ ವಿಚಾರವನ್ನು ಮುಂದಿಟ್ಟುಕೊಂಡು ಅಂಗನವಾಡಿ ಪ್ರತಿಭಟನೆ ಹಮ್ಮಿಕೊಂಡಿದೆ. ಸರ್ಕಾರ ಪೋಲಿಸರನ್ನು ಬಳಕೆ ಮಾಡಿಕೊಂಡು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷೆ ಎ.ನಾಗಮಣಿ ಕಾರ್ಯದರ್ಶಿ ಶಾಯಿದಾಬಾನು, ಕೊಳ್ಳೇಗಾಲ ತಾಲೂಕು ಅಧ್ಯಕ್ಷೆ ಶಾಂತಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಸುಜಿಯಾ ಯಳಂದೂರು ತಾಲೂಕು ಅಧ್ಗಕ್ಷೆ ಮೀನಾಕ್ಷಿ, ಭಾಗ್ಯ ಜಿ.ಕೆಂಪಮ್ಮ, ಮಂಜುಳ, ದೇವಮಣಿ, ನೀಲಾವತಿ, ಸಿಐಟಿಯು ರಾಜ್ಯ ಸದಸ್ಯ ಸುನೀಲ್ ಕುಮಾರ್ ಇತರರು ಭಾಗವಹಿಸಿದ್ದರು.