ಸಾರಾಂಶ
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಬೃಹತ್ ರ್ಯಾಲಿ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಬೃಹತ್ ರ್ಯಾಲಿ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.ಬೆಳಗ್ಗೆ ಬಾದಾಮಿ ಬನಶಂಕರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೆಬ್ಬಳ್ಳಿ ಗ್ರಾಮದ ದೊಡ್ಡ ಲಾಲಸಾಬ್ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಅಜಯಕುಮಾರ ಸರನಾಯಕ ಮತ್ತು ಎಂ.ಬಿ. ಸೌದಾಗಾರ್ ಇದ್ದರು. ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳುವ ವೇಳೆ ಸಂಯುಕ್ತ ಪಾಟೀಲ ಅವರಿಗೆ ಕಂಬಳಿ ಹೊದಿಸಿ ಶುಭ ಕೋರಲಾಯಿತು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ನಮ್ಮ ಅಭ್ಯರ್ಥಿಯ ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಅಜಯಕುಮಾರ ಸರನಾಯಕ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಗಮನಿಸಿರುವ ಮತದಾರರು ನಿಶ್ಚಿತವಾಗಿ ಸಂಯುಕ್ತಾ ಪಾಟೀಲರನ್ನು ಆಯ್ಕೆ ಮಾಡುತ್ತಾರೆ. ಸತತವಾಗಿ 20 ವರ್ಷ ಸಂಸತ್ ಸದಸ್ಯರಾಗಿರುವ ಪಿ.ಸಿ. ಗದ್ದಿಗೌಡರ ಬಾಗಲಕೋಟ ಅಭಿವೃದ್ಧಿಗೆ ಪ್ರಯತ್ನ ಮಾಡಲಿಲ್ಲ. ಕುಡಚಿ - ಬಾಗಲಕೋಟೆ ರೈಲ್ವೆ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ಯಾವುದೆ ಉದ್ಯಮ ಜಿಲ್ಲೆಗೆ ತರಲು ಪ್ರಯತ್ನ ಮಾಡಲಿಲ್ಲ. ಜಿಲ್ಲೆಯಲ್ಲಿ ಐತಿಹಾಸಿಕ ಪ್ರವಾಸಿ ತಾಣಗಳಿವೆ. ಕೇಂದ್ರದ ಅನುದಾನ ತಂದು ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದವು. ಆದರೆ, ಗದ್ದಿಗೌಡರು ಈ ನಿಟ್ಟಿನಲ್ಲಿ ಪ್ರಯತ್ನ ಮಾಡಲಿಲ್ಲ ಎಂದು ಟೀಕಿಸಿದರು.--
ಕೋಟ್ಪಿ.ಸಿ. ಗದ್ದಿಗೌಡರು ಸಂಸದರಾಗಿ 20 ವರ್ಷಗಳಲ್ಲಿ ಬಾಗಲಕೋಟ ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಹೇಳಲಿ. ನಂತರ ಅವರು ಏನನ್ನು ಮಾಡಿಲ್ಲ ಎಂಬುದನ್ನು ನಾವು ಹೇಳುತ್ತೇವೆ.
-ಎಸ್.ಜಿ.ನಂಜಯ್ಯನಮಠ, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ-----------