ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖ ಹಾಗೂ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದ್ದಾರೆ.

ಶಿರ್ವ: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖ ಹಾಗೂ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದ್ದಾರೆ.

ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.ಇನ್ನೆರಡು ವರ್ಷಗಳಲ್ಲಿ ಸಹಕಾರ ಭಾರತಿ ಸುವರ್ಣ ಮಹೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ ತಳಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದರು.ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ನಿಯಮಿತ ಕಾರ್ಯಕಾರಿಣಿ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಮಾಸಿಕ ಸಭೆಗಳನ್ನು ನಡೆಸುವ ಮೂಲಕ ಸಂಘಟನೆಯನ್ನು ಬಲಪಡಿಸುವಂತೆ ಜಿಲ್ಲಾ ಪ್ರಮುಖರಿಗೆ ಸೂಚಿಸಿದರು.ವಿವಿಧ ಜಿಲ್ಲೆ ಪ್ರಮುಖರು: ಮೈಸೂರು, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರಮುಖರು ತಮ್ಮ ಕಾರ್ಯಚಟುವಟಿಕೆಗಳ ವರದಿ ಮಂಡಿಸಿದರು.

ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಅವರು ನವೆಂಬರ್‌ನಲ್ಲಿ ಮೈಸೂರಿನ ಬನ್ನೂರಿನಲ್ಲಿ ಹೈನುಗಾರ ಪ್ರಕೋಷ್ಟದ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಅವರು ಡಿಸೆಂಬರ್‌ನಲ್ಲಿ ಮಡಿಕೇರಿಯಲ್ಲಿ ಪ್ಯಾಕ್ಸ್ ಪ್ರಕೋಷ್ಟದ ಅಭ್ಯಾಸ ವರ್ಗ ಆಯೋಜಿಸಲಾಗುವುದು ಎಂದರು.

ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ಹೈನುಗಾರರ ಸಮಾವೇಶ, ಮಂಗಳೂರು ಮಹಾನಗರದಲ್ಲಿ ಕ್ರೆಡಿಟ್ ಸಹಕಾರಿ ಸಮಾವೇಶ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ಯಾಕ್ಸ್ ಸಮಾವೇಶ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕ್ಯಾಂಪ್ಕೋ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಸಂಸ್ಥೆಗೆ ಆಗಮಿಸಿದ ಎಸ್.ಆರ್. ಸತೀಶ್ ಚಂದ್ರ ಅವರನ್ನು ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ಸನ್ಮಾನಿಸಲಾಯಿತು.

40 ಪದಾಧಿಕಾರಿಗಳು ಭಾಗಿ: ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿದರು.